ಯೋಜನಾ ಮಂಡಳಿ ಪುನರ್ರಚನೆ
ಬೆಂಗಳೂರು: ರಾಜ್ಯ ಯೋಜನಾ ಮಂಡಳಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುನರ್ರಚಿಸಿದ್ದು, ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಸೇರಿದಂತೆ ಇತರ ಕೆಲವರಿಗೆ ಮಂಡಳಿಯಲ್ಲಿ ಸ್ಥಾನ ನೀಡಲಾಗಿದೆ. ಮುಖ್ಯಮಂತ್ರಿಯವರು ಯೋಜನಾ ಮಂಡಳಿಯ ಅಧ್ಯಕ್ಷರಾದರೆ, ಮಾಜಿ ಸಚಿವ ರಾಮಚಂದ್ರ ಗೌಡ ಉಪಾಧ್ಯಕ್ಷರಾಗಿದ್ದಾರೆ.
ಉನ್ನತ ಶಿಕ್ಷಣ ಮತ್ತು ಯೋಜನಾ ಖಾತೆ ಸಚಿವ ಡಾ.ವಿ.ಎಸ್. ಆಚಾರ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್ ಮಂಡಳಿಯ ಸದಸ್ಯರು. ಅಭಿವೃದ್ಧಿ ಆಯುಕ್ತರು, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿಯವರನ್ನೂ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಇತರ ಸದಸ್ಯರು: ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರದಿಂದ ಜೆ.ಎಸ್.ಎಸ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ನಿರ್ದೇಶಕ ಡಾ. ಎಂ.ಮಹದೇವಪ್ಪ, ಮೈರಾಡ (ಎಂ.ವೈ.ಆರ್.ಡಿ.ಎ) ಪ್ರತಿನಿಧಿಯಾಗಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ, ಎಂಜಿನಿಯರಿಂಗ್ ಕ್ಷೇತ್ರದಿಂದ ವಿಶ್ರಾಂತ ಕುಲಪತಿ ಪ್ರೊ ಎಚ್.ಪಿ.ಖಿಂಚಾ, ಗ್ರಾಮೀಣಾಭಿವೃದ್ಧಿ ಇಲಾಖೆ ಮಾಜಿ ಕಾರ್ಯದರ್ಶಿ ಡಾ.ರಘುನಂದನ್, ನಿಟ್ಟೆಯ ಜಸ್ಟೀಸ್ ಕೆ.ಎಸ್. ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನ ಪ್ರೊ ಜಿ. ಜೋಷಿ, ಧಾರವಾಡದ ಅರ್ಥಶಾಸ್ತ್ರ ಪ್ರಾಧ್ಯಾಪಕ ಎಂ.ಸಿ. ಕೊಡ್ಲಿ, ಮೈಸೂರು ಜಿಲ್ಲೆಯ ಕೆ.ಆರ್.ನಗರದ ಡಾ.ವೈ.ಎ.ದೇವಪಾಲ್ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಪ್ರಧಾನ ಕಾರ್ಯದರ್ಶಿಯವರು ಮಂಡಳಿಯ ಪದನಿಮಿತ್ತ ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.