ವಿಜಯಶಂಕರ್ ನಾಮಪತ್ರ ಸಲ್ಲಿಕೆ

ಹಾಸನ: ಮಾಜಿ ಸಚಿವ ಸಿ.ಎಚ್. ವಿಜಯಶಂಕರ್ ಸೋಮವಾರ ಹಾಸನ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಯಾಗಿ ನಾಮಪತ್ರ ಸಲ್ಲಿಸಿದರು.
ಸೋಮವಾರ ಬೆಳಿಗ್ಗ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅವರು ಅದೇ ಆವರಣದಿಂದ ತೆರೆದ ಜೀಪ್ನಲ್ಲಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದರು. ಶಾಸಕ ಸಿ.ಟಿ. ರವಿ, ವಿಧಾನ ಪರಿಷತ್ ಸದಸ್ಯ ಗೋ. ಮಧುಸೂದನ್, ಹುಡಾ ಮಾಜಿ ಅಧ್ಯಕ್ಷ ನವಿಲೆ ಅಣ್ಣಪ್ಪ, ಬಿ.ಕೆ. ಮಂಜುನಾಥ್ ಮತ್ತಿತರರು ತೆರೆದ ಜೀಪ್ನಲ್ಲಿ ಮೆರವಣಿಗೆ ಮೂಲಕ ಬಂದರು. ನೂರಾರು ಕಾರ್ಯಕರ್ತರು ಜೊತೆಯಲ್ಲಿದ್ದರು.
ನಾಮಪತ್ರ ಸಲ್ಲಿಸಿದ ಬಳಿಕ ಪತ್ರಕರ್ತ ರೊಡನೆ ಮಾತನಾಡಿದ ವಿಜಯ ಶಂಕರ್, ‘ಜಿಲ್ಲೆಯ ಮುಖಂಡರು, ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಹಿರಿಯ ಮುಖಂಡ ಬಿ.ಬಿ. ಶಿವಪ್ಪ ಅವರೂ ದೂರವಾಣಿ ಮೂಲಕ ಮಾತನಾಡಿ ಆಶೀರ್ವಾದ ಮಾಡಿದ್ದಾರೆ. ಈ ಬಾರಿ ಜಿಲ್ಲೆಯಲ್ಲಿ ಬಿಜೆಪಿ ಬಾವುಟ ಹಾರಿಸುವುದು ಖಚಿತ’ ಎಂದರು.
ಸಿ.ಟಿ. ರವಿ ಮಾತನಾಡಿ, ‘ಬಿಜೆಪಿಯನ್ನು ಕೋಮುವಾದಿ ಎಂದು ಜರಿಯುತ್ತ ಬಂದಿರುವ ಜಡಿಎಸ್ ಅವಕಾಶ ಬಂದಾಗ ಬೇಕಾದ ಪಕ್ಷದ ಜೊತೆ ಹೊಂದಾಣಿಕೆ ಮಾಡುತ್ತ ರಾಜಕಾರಣ ಮಾಡಿದೆ. ಈ ಬಾರಿ ಹಾಸನದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ’ ಎಂದರು.
‘ದೇಶದಾದ್ಯಂತ ಈಗ ಮೋದಿ ಅಲೆ ಇದೆ. ಇದರಿಂದ ಕಂಗೆಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಡಬಡಾಯಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ನಡೆಯಲಿದೆ’ ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.