ವಿವಿಧ ಬೇಡಿಕೆ ಈಡೇರಿಕೆಗೆ ದಸಂಸ ಆಗ್ರಹ
ಚಾಮರಾಜನಗರ: ಪರಿಶಿಷ್ಟರಿಗೆ ಅಗತ್ಯ ಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಮಂಗಳವಾರ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕೆ.ಆರ್. ಸುಂದರ್ಗೆ ಮನವಿ ಸಲ್ಲಿಸಲಾಯಿತು.
ಬ್ಯಾಕ್ಲಾಗ್ ಮೂಲಕ ನೇಮಕವಾಗಿರುವ ಎಂಜಿನಿಯರ್ಗಳ ಪ್ರಕರಣ ಕುರಿತು ಹೈಕೋರ್ಟ್ ನೀಡಿರುವ ತೀರ್ಪಿನ ಸಂಬಂಧ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಬೇಕು. ಎಂಜಿನಿಯರ್ಗಳಿಗೆ ಸೇವಾ ಭದ್ರತೆ ನೀಡಬೇಕು. ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ದಲಿತರು ಪಡೆದಿರುವ ಸಾಲ ಮನ್ನಾ ಮಾಡಬೇಕು.
ಪ್ರತಿಯೊಂದು ಗ್ರಾಮದಲ್ಲೂ ಪರಿಶಿಷ್ಟರಿಗೆ ಸ್ಮಶಾನಕ್ಕೆ ಭೂಮಿ ಒದಗಿಸಬೇಕು ಎಂದು ಒತ್ತಾಯಿಸಿದರು. ಮೊದಲು ಫಾರಂ- 50 ಹಾಕಿದವರಿಗೆ ಕೂಡಲೇ ಸಾಗುವಳಿ ಚೀಟಿ ಹಾಗೂ ಹಕ್ಕುಪತ್ರ ವಿತರಿಸಬೇಕು. ವಿದ್ಯಾರ್ಥಿ ನಿಲಯದ ಸೌಲಭ್ಯ ಬಯಸಿ ಅರ್ಜಿ ಸಲ್ಲಿಸುವ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಬೇಕು. ಬೆಲೆ ಏರಿಕೆಗೆ ಅನುಗುಣವಾಗಿ ವಿದ್ಯಾರ್ಥಿ ವೇತನ ನೀಡಬೇಕು. ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಬಿಲ್ಕಲೆಕ್ಟರ್, ವಾಟರ್ಮ್ಯಾನ್, ಪೌರ ಕಾರ್ಮಿಕರನ್ನು ರೋಸ್ಟರ್ ಆಧಾರದ ಮೇಲೆ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.
ಶಾಸಕರ ಅಧ್ಯಕ್ಷತೆಯಲ್ಲಿಯೇ ಸರ್ಕಾರದ ಯೋಜನೆಯಡಿ ಫಲಾನುಭವಿಗಳ ಆಯ್ಕೆ ನಡೆಯುತ್ತಿದೆ. ಇದನ್ನು ರದ್ದುಪಡಿಸಬೇಕು. ಎಲ್ಲ ಇಲಾಖೆಗಳ ದಿನಗೂಲಿ ನೌಕರರ ಸೇವೆಯನ್ನು ಕಾಯಂಗೊಳಿಸಬೇಕು. ಜಿಲ್ಲೆಯ ದಲಿತರ ಸಮಸ್ಯೆ ಆಲಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಡಿ ಎರಡು ತಿಂಗಳಿಗೊಮ್ಮೆ ಸಭೆ ನಡೆಸಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು.
ದಸಂಸ ಜಿಲ್ಲಾ ಸಂಚಾಲಕ ಎಸ್. ಲಕ್ಷ್ಮಣಸ್ವಾಮಿ ಧನಗೆರೆ, ಎಸ್. ಲಿಂಗಯ್ಯ, ಪಿ. ಮಹಾದೇವಸ್ವಾಮಿ, ರವಿಕುಮಾರ್, ಕೆ. ಬಸವಣ್ಣ ಹಾಜರಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.