ಶುಲ್ಕ ಮರುಪಾವತಿಗೆ ಸಮ್ಮತಿ
ಚಿಕ್ಕಮಗಳೂರು: ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶುಲ್ಕ ಮರುಪಾವತಿಗೆ ಸರ್ಕಾರ ಸಮ್ಮತಿಸಿದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ಜಿಲ್ಲಾ ಘಟಕದ ಸಹ ಸಂಚಾಲಕ ಸಂತೋಷ್ ಕೋಟ್ಯಾನ್ ತಿಳಿಸಿದ್ದಾರೆ.
ಶುಲ್ಕ ಮರುಪಾವತಿ ಯೋಜನೆ ಪರಿಷ್ಕರಿಸಿದ ಆದೇಶವನ್ನು ಹಿಂದಕ್ಕೆ ಪಡೆಯ ಬೇಕೆಂದು ಒತ್ತಾಯಿಸಿ ಕಳೆದ 8ರಿಂದ18ರವರೆಗೆ ರಾಜ್ಯದಾದ್ಯಂತ ಎರಡು ಬಾರಿ ಪ್ರತಿಭಟಿಸಲಾಗಿತ್ತು. ಸಂಘಟನೆಯ ಕ್ಷೇತ್ರಿಯ ಸಂಘಟನಾ ಕಾರ್ಯದರ್ಶಿ ಎನ್.ರವಿಕುಮಾರ್ ನೇತೃತ್ವದಲ್ಲಿ ನಿಯೋಗ ತೆರಳಿ ಸಮಾಜ ಕಲ್ಯಾಣ ಸಚಿವರು, ಉನ್ನತ ಶಿಕ್ಷಣ ಸಚಿವರು, ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದಾಗ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪರೀಕ್ಷಾಶುಲ್ಕವನ್ನು ಮರುಪಾವತಿಸುವುದಾಗಿ ಸಚಿವರು ತಿಳಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಈ ಸಾಲಿನಲ್ಲಿ ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿಗೆ ಸಂಬಂಧಿಸಿದ ಪ್ರವರ್ಗ-1ಕ್ಕೆ ವಾರ್ಷಿಕ ವರಮಾನ ಮಿತಿಯನ್ನು 1ಲಕ್ಷ ರೂಪಾಯಿಗಳಿಂದ 2ಲಕ್ಷ ರೂಪಾಯಿಗಳವರೆಗೆ ಹೆಚ್ಚಿಸಿದೆ. ಪ್ರವರ್ಗ 2ಎ, 3ಎ, 3ಬಿಗೆ ವಾರ್ಷಿಕ ಆದಾಯ ಮಿತಿಯನ್ನು ಈ ಹಿಂದಿನ 11ಸಾವಿರ ರೂಪಾಯಿಯಿಂದ ರೂ.44,500ಕ್ಕೆ ಹೆಚ್ಚಿಸಲಾಗಿದೆ.
ಈ ಸಾಲಿನಲ್ಲಿ ಪದವಿಪೂರ್ವದಿಂದ ಸ್ನಾತಕೋತ್ತರ ಶಿಕ್ಷಣದವರೆಗೆ ಎಲ್ಲ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಭರಿಸುವುದಾಗಿ ಸರ್ಕಾರ ಒಪ್ಪಿಗೆ ನೀಡಿ, ಈ ಹಿಂದಿನ ಪದ್ಧತಿಯನ್ನೇ ಜಾರಿಗೊಳಿಸುವುದಾಗಿ ಸಮಾಜ ಕಲ್ಯಾಣ ಸಚಿವರು ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಆಂಧ್ರಪ್ರದೇಶ ಸರ್ಕಾರದ ಮಾದರಿಯಲ್ಲಿ ಕರ್ನಾಟಕದಲ್ಲೂ ಬಿಸಿಎಂ ನೀತಿಯನ್ನು ಜಾರಿಗೊಳಿಸಬೇಕು. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಬೇಕೆಂಬ ಬೇಡಿಕೆ ಸೇರಿದಂತೆ 12 ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗಿದೆ ಎಂದು ಅವರು ಹೇಳಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.