ರಾಜರಾಜೇಶ್ವರಿನಗರ: ಪ್ರತಿಯೊಬ್ಬರಿಗೂ ಪರಿಶುದ್ದ ನೀರನ್ನು ದೊರಕಿಸಿ ಕೊಡಲು ಬೆಂಗಳೂರು ಗ್ರಾಮಾಂತರ ಲೋಕಸಭಾಕ್ಷೇತ್ರ ವ್ಯಾಪ್ತಿಯಲ್ಲಿ 100 ನೀರಿನ ಘಟಕಗಳನ್ನು ಸ್ಥಾಪಿಸಿ 10 ಪೈಸೆಗೆ ಲೀಟರ್ನಂತೆ ನೀರನ್ನು ನೀಡಲಾಗುವುದು ಎಂದು ಲೋಕಸಭಾ ಸದಸ್ಯ ಡಿ.ಕೆ.ಸುರೇಶ್ ತಿಳಿಸಿದರು.
ಲೋಕಸಭಾ ಚುನಾವಣೆಯಲ್ಲಿ ಗೆಲುವಿಗೆ ಕಾರಣಕರ್ತರಾದ ಮತದಾರರು ಮತ್ತು ಕಾರ್ಯಕರ್ತರಿಗೆ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ಜನತೆಯ ಋಣವನ್ನು ತೀರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿ ವಾರಕ್ಕೊಮ್ಮೆ ಜನರ ಮಧ್ಯೆ ಇದ್ದು ಕ್ಷೇತ್ರದ ಅಭಿವೃದ್ದಿಗೆ ಆಧ್ಯತೆ ನೀಡುತ್ತೇನೆ ಎಂದು ಭರವಸೆ ನೀಡಿದರು.
ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲರನ್ನು ಒಗ್ಗೂಡಿಸಿ ಜನರ ಸೇವೆಗೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಡಿ.ಕೆ.ಶಿವಕುಮಾರ್ ಹೇಳಿದರು.
ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಈ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿ ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ಜನರಿಂದ ತಿರಸ್ಕಾರಗೊಂಡಿದ್ದಾರೆ ಎಂದು ಟೀಕಿಸಿದರು.
ಕ್ಷೇತ್ರದ ಕಾಂಗ್ರೆಸ್ ಅಧ್ಯಕ್ಷ ಎಂ.ರಾಜಕುಮಾರ್, ನಗರಸಭೆ ಮಾಜಿ ಅಧ್ಯಕ್ಷ ಹನುಮಂತರಾಯಪ್ಪ, ಮುಖಂಡರಾದ ಟಿ.ಎಂ.ಕೃಷ್ಣ ಮೂರ್ತಿ, ಎಂ.ಮಂಜುನಾಥ್ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ಜಿ.ಮೋಹನ್ಕುಮಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಲ್.ಶಿವಣ್ಣ, ಮಾಹಿತಿ ತಂತ್ರಜ್ಞಾನ ವಿಭಾಗದ ಅಧ್ಯಕ್ಷ ಎ.ಅಮರ್ನಾಥ್, ಮಾಜಿ ಶಾಸಕ ಎಸ್.ರವಿ ಅವರು ಮಾತನಾಡಿದರು.
ಶಾಸಕ ಮುನಿರತ್ನ, ಬಿಬಿಎಂಪಿ ಸದಸ್ಯರಾದ ಗೋವಿಂದರಾಜು,ವೆಂಕಟೇಶ್ಬಾಬು ಹಾಜರಿದ್ದರು.