ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

108 ಸಿಬ್ಬಂದಿ ಮುಷ್ಕರ ಶುರು

Last Updated 28 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು:  ಆರೋಗ್ಯ ಕವಚ (108) ಅಂಬುಲೆನ್ಸ್‌ನಲ್ಲಿ ಕೆಲಸ ನಿರ್ವಹಿಸುತ್ತಿರುವ 3 ಸಾವಿರಕ್ಕೂ ಅಧಿಕ ನೌಕರರನ್ನು ಖಾಸಗಿ ಸಂಸ್ಥೆಯಿಂದ ಮುಕ್ತಗೊಳಿಸಿ ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ 2,800ಕ್ಕೂ ಅಧಿಕ ನೌಕರರು ನಗರದಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ಬುಧವಾರದಿಂದ ಆರಂಭಿಸಿದ್ದಾರೆ.

`ಕರ್ನಾಟಕ ರಾಜ್ಯ ಆರೋಗ್ಯ ಕವಚ (108) ನೌಕರರ ಸಂಘ~ದ (ಅಖಿಲ ಭಾರತ ಯುಟಿಯುಸಿಗೆ ಸಂಯೋಜಿತ) ನೇತೃತ್ವದಲ್ಲಿ ರಾಜ್ಯದ 30 ಜಿಲ್ಲೆಗಳಿಂದ ಆಗಮಿಸಿದ್ದ ನೌಕರರು ಬೆಳಿಗ್ಗೆ ಚಿಕ್ಕಲಾಲ್‌ಬಾಗ್‌ನಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಬೃಹತ್ ರ‌್ಯಾಲಿ ನಡೆಸಿದರು.

ಮಾರ್ಗದುದ್ದಕ್ಕೂ ತಮ್ಮ ಬೇಡಿಕೆಗಳ ಕುರಿತಂತೆ ಘೋಷಣೆಗಳನ್ನು ಕೂಗಿದ ಅವರು, ತಮ್ಮ ಸಮಸ್ಯೆಗಳನ್ನು ಸರ್ಕಾರ ಪರಿಹರಿಸುವವರೆಗೂ ಮುಷ್ಕರವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ, ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೆ.ಸೋಮಶೇಖರ್ ಮಾತನಾಡಿ, `ನೌಕರರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆರೋಗ್ಯ ಕವಚ ಯೋಜನೆ ನಿರ್ವಹಿಸುತ್ತಿರುವ ಹೈದರಾಬಾದ್ ಮೂಲದ ಜಿ.ವಿ.ಕೆ. ಇ.ಎಂ.ಆರ್.ಐ ಸಂಸ್ಥೆಗೆ ಈಗಾಗಲೇ ಮನವಿ ಮಾಡಿದ್ದರೂ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಆರೋಗ್ಯ ಸಚಿವರಾಗಿದ್ದ ಶ್ರೀರಾಮುಲು ಅವರಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಹಲವು ಮನವಿ, ಒತ್ತಾಯಗಳ ಬಳಿಕ ಅಂತಿಮವಾಗಿ ಕೆಲಸ ಬಹಿಷ್ಕರಿಸುವ ಕ್ರಮಕ್ಕೆ ಸಂಘ ಮುಂದಾಗಿದೆ. ಮುಂದಿನ ಅನಾಹುತಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗುತ್ತದೆ. ನೌಕರರ ಸಮಸ್ಯೆಗಳನ್ನು ಸಾರ್ವಜನಿಕರೂ ಬೆಂಬಲಿಸಿ ಸರ್ಕಾರದ ಮೇಲೆ ಒತ್ತಡ ಹೇರಬೇಕು~ ಎಂದರು.

ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್‌ನ ರಾಜ್ಯ ಅಧ್ಯಕ್ಷ ಕೆ.ರಾಧಾಕೃಷ್ಣ ಮಾತನಾಡಿ, `ಜಾಗತೀಕರಣ ನೀತಿಯಿಂದಾಗಿ ಸರ್ಕಾರ ನಿರ್ವಹಿಸಬೇಕಾದ ಕರ್ತವ್ಯಗಳನ್ನು ಖಾಸಗಿಯವರಿಗೆ ನೀಡಲಾಗುತ್ತಿದೆ. ಆರೋಗ್ಯ ಇಲಾಖೆಯನ್ನೂ ಖಾಸಗೀಕರಣ ಮಾಡುವ ಮೂಲಕ ನೌಕರರ ಶೋಷಣೆಗೆ ಸರ್ಕಾರವೇ ಅನುವು ಮಾಡಿಕೊಟ್ಟಿದೆ~ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜೆಡಿಎಸ್ ವಕ್ತಾರ ವೈ.ಎಸ್.ವಿ.ದತ್ತ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದರು.

`ಮುಖ್ಯಮಂತ್ರಿಗಳನ್ನೇ ಕೇಳಿ~
: ಸಂಘದ ಕೆಲ ಮುಖಂಡರು ಮತ್ತು ನೌಕರರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ. ಇ.ವಿ.ರಮಣರೆಡ್ಡಿ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ತಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಲಿಲ್ಲ ಎಂದು ಸಂಘದ ಮುಖಂಡರು ದೂರಿದ್ದಾರೆ. ಕೆಲವು ತಿಂಗಳ ಹಿಂದೆಯೇ ತಮ್ಮ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು. ಅದಕ್ಕೆ ರಮಣರೆಡ್ಡಿ ಅವರು `ಹಾಗಿದ್ದರೆ ಮುಖ್ಯಮಂತ್ರಿಗಳನ್ನೇ ಕೇಳಿ ಎಂದರು. ಕನಿಷ್ಠ ನೌಕರರ ಸಮಸ್ಯೆಗಳನ್ನು ಪರಿಶೀಲಿಸುವ ಮಾತುಗಳನ್ನೂ ಆಡಲಿಲ್ಲ~ ಎಂದು ಸಂಘದ ಅಧ್ಯಕ್ಷ ಸೋಮಶೇಖರ್ ವಿಷಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT