ಬೆಂಗಳೂರು: ಐಎಎಸ್ ಅಧಿಕಾರಿ ಎಂ.ವಿ. ವೀರಭದ್ರಯ್ಯ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಕೋರಿ ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರೀಯ ಆಡಳಿತ ನ್ಯಾಯಮಂಡಳಿ (ಸಿ.ಎ.ಟಿ) ಬುಧವಾರ ಆದೇಶ ನೀಡಿದೆ.
ವೀರಭದ್ರಯ್ಯ ಅವರು 2012ರ ಅಕ್ಟೋಬರ್ 1ರಂದು ಸಲ್ಲಿಸಿದ ಅರ್ಜಿಯನ್ನು ಸರ್ಕಾರ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ವೀರಭದ್ರಯ್ಯ ಸಿಎಟಿ ಮೊರೆ ಹೋಗಿದ್ದರು. `ವೀರಭದ್ರಯ್ಯ ಅವರು ಸಲ್ಲಿಸಿರುವ ಅರ್ಜಿಯನ್ನು, ಈ ಆದೇಶದ ಪ್ರತಿ ದೊರೆತ 15 ದಿನಗಳಲ್ಲಿ ಸೂಕ್ತ ರೀತಿಯಲ್ಲಿ ಪರಿಗಣಿಸಬೇಕು' ಎಂದು ಸಿಎಟಿ, ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅರ್ಜಿ ತಿರಸ್ಕರಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದು ಮಾಡಿದೆ.
ಮಿರ್ಜಿ ಅರ್ಜಿ: ನಗರ ಪೊಲೀಸ್ ಆಯುಕ್ತರ ಸ್ಥಾನದಿಂದ ತಮ್ಮನ್ನು ವರ್ಗಾವಣೆ ಮಾಡಿದ ಸರ್ಕಾರದ ಕ್ರಮ ಪ್ರಶ್ನಿಸಿ ಐಪಿಎಸ್ ಅಧಿಕಾರಿ ಜ್ಯೋತಿಪ್ರಕಾಶ್ ಮಿರ್ಜಿ `ಸಿಎಟಿ' ಮೆಟ್ಟಿಲೇರಿದ್ದಾರೆ.
ಅವರು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೆ ಸಿಎಟಿ ಆದೇಶಿಸಿದೆ. ಅರ್ಜಿಯ ವಿಚಾರಣೆಯನ್ನು ಇದೇ 17ಕ್ಕೆ ಮುಂದೂಡಲಾಗಿದೆ.