ಬೆಂಗಳೂರು: ರಾಜ್ಯದಲ್ಲಿ ಈ ವರ್ಷ 167 ಹೊಸ ವಿದ್ಯುತ್ ವಿತರಣಾ ಉಪ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.
ಸೋಮವಾರ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಮನೋಹರ ಮಸ್ಕಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, `ರಾಜ್ಯದಲ್ಲಿ ಅಗತ್ಯ ಪ್ರಮಾಣದ ವಿದ್ಯುತ್ ಲಭ್ಯವಿದ್ದರೂ ಕೆಲವು ಜಿಲ್ಲೆಗಳಲ್ಲಿ ವಿದ್ಯುತ್ ಪರಿವರ್ತಕ ಹಾಗೂ ವಿದ್ಯುತ್ ಮಾರ್ಗಗಳ ಸಾಮರ್ಥ್ಯ ಕಡಿಮೆಯಿದೆ. ಇದರಿಂದ ವಿದ್ಯುತ್ ಲಭ್ಯವಿದ್ದರೂ ಅನೇಕ ಗ್ರಾಮೀಣ ಭಾಗಗಳಿಗೆ ಸಮರ್ಪಕ ವಿದ್ಯುತ್ ಪೂರೈಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ವರ್ಷ ಹೊಸದಾಗಿ 167 ಹೊಸ 220, 110 ಹಾಗೂ 66 ಕೆ.ವಿ. ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ~ ಎಂದರು.
`ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ ಬೀದಿ ದೀಪಗಳ ನಿರ್ವಹಣೆಗೆ `ಟೈಮರ್~ ಅಳವಡಿಸಲು ವಿಶೇಷ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಸಂಜೆ 6ರಿಂದ ಬೆಳಿಗ್ಗೆ 5.30ರವರೆಗೆ ವಿದ್ಯುತ್ ದೀಪಗಳನ್ನು ನಿರ್ವಹಣೆ ಮಾಡಲು ಸಾಧ್ಯವಾಗಲಿದ್ದು, ವಿದ್ಯುತ್ ಪೋಲಾಗುವುದನ್ನು ತಪ್ಪಿಸಬಹುದಾಗಿದೆ~ ಎಂದರು.
`ರಾಜ್ಯದಲ್ಲಿ `ನಿರಂತರ ಜ್ಯೋತಿ~ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಗುಲ್ಬರ್ಗ ವಿಭಾಗ ವ್ಯಾಪ್ತಿಯಲ್ಲಿ ಏಪ್ರಿಲ್- ಮೇ ವೇಳೆಗೆ ಈ ಕೆಲಸ ಪೂರ್ಣಗೊಳ್ಳಲಿದ್ದು, ಆನಂತರ ಈ ವ್ಯಾಪ್ತಿಯಲ್ಲಿಯೂ ವಿದ್ಯುತ್ ಸಮಸ್ಯೆ ಬಗೆಹರಿಯಲಿದೆ~ ಎಂದು ಅವರು ಹೇಳಿದರು.