ಬೆಂಗಳೂರು: ರೈತರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ರೈತರಿಗೆ ಅನ್ಯಾಯ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ನಿರ್ಣಯ ಕೈಗೊಳ್ಳಲು ಇದೇ 21ರಂದು ನರಗುಂದದಲ್ಲಿ ರೈತರ ಬೃಹತ್ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 34ನೇ ರೈತ ಹುತಾತ್ಮ ದಿನಾಚರಣೆಯ ಅಂಗವಾಗಿ ಏರ್ಪಡಿಸಿರುವ ಈ ಸಮಾವೇಶದಲ್ಲಿ ಮಲಪ್ರಭಾ ಹಾಗೂ ಕಳಸಾ ಬಂಡೂರಿ ನಾಲೆಯ ನೀರಿನ ಸಮಸ್ಯೆಗಳನ್ನು ಸಂಪೂರ್ಣವಾಗಿ ಬಗೆಹರಿಸುವ ಹಾಗೂ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಸರ್ಕಾರ ಯಾವ ರೀತಿ ಸಹಕಾರ ನೀಡಬೇಕು ಎಂಬುದರ ಬಗ್ಗೆ ಚರ್ಚಿಸಲಾಗುವುದು ಎಂದರು.
ರಸಗೊಬ್ಬರದ ಬೆಲೆಯನ್ನು ನಿಯಂತ್ರಣ ಮಾಡುವುದು, ರೈತರ ಮೇಲೆ ಕೃಷಿ ಆದಾಯ ತೆರಿಗೆ ಹೇರದಂತೆ ನೋಡಿಕೊಳ್ಳುವುದು ಹಾಗೂ ಬ್ಯಾಂಕ್ ಮತ್ತು ಸಹಕಾರ ಸಂಘಗಳ ಮೂಲಕ ರೈತರಿಗೆ ನೀಡುವ ಕೃಷಿ ಸಾಲವನ್ನು ಸಂಪೂರ್ಣವಾಗಿ ಬಡ್ಡಿ ರಹಿತವಾಗಿ ನೀಡುವುದು ಸೇರಿದಂತೆ ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗುವುದು ಎಂದು ವಿವರಿಸಿದರು.