ಚನ್ನಪಟ್ಟಣ: `ಸರ್ಕಾರಿ ಬಸ್ ನಿಲ್ದಾಣದ ಹಿಂಭಾಗ 25 ಲಕ್ಷ ಅಂದಾಜು ವೆಚ್ಚದಲ್ಲಿ ಗ್ರಾಮಾಂತರ ಬಸ್ ನಿಲುಗಡೆ ಹಾಗೂ ಪ್ರಯಾಣಿಕರ ತಂಗುದಾಣ ನಿರ್ಮಿಸಲಾಗುವುದು~ ಎಂದು ಸಾರಿಗೆ ಸಚಿವ ಆರ್.ಅಶೋಕ್ ತಿಳಿಸಿದರು.
ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದ ನಂತರ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು.ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿದ್ದು, ಪಟ್ಟಣ ವ್ಯಾಪ್ತಿಯಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ.
ಈ ಸಂಬಂಧ ಬೈಪಾಸ್ ರಸ್ತೆ ನಿರ್ಮಾಣ ಕೋರಿಕೆ ಇಲ್ಲಿನ ಜನಪ್ರತಿನಿಧಿಗಳು ಮನವಿ ಸಲ್ಲಿಸಿದ್ದಾರೆ. ಈ ವಿಚಾರವಾಗಿ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪಟ್ಟಣದಲ್ಲಿ ಸಂಚಾರಿ ಪೊಲೀಸ್ ಠಾಣೆ ಹಾಗೂ ಸಂಚಾರಿ ಪೊಲೀಸರನ್ನು ನಿಯೋಜಿಸುವ ಬಗ್ಗೆ ಮತ್ತು ಹೆದ್ದಾರಿಯಲ್ಲಿ ಅಪಘಾತಗಳನ್ನು ನಿಯಂತ್ರಿಸುವ ವಿಚಾರವಾಗಿ ಈಗಾಗಲೇ ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಲಾಗಿದ್ದು, ಶೀಘ್ರದಲ್ಲಿ ಆದೇಶ ಹೊರ ಬೀಳಲಿದೆ ಎಂದು ಅರಣ್ಯ ಸಚಿವ ಸಿ.ಪಿ.ಯೋಗೀಶ್ವರ್ ತಿಳಿಸಿದರು.
ರಾಮನಗರ ಜಿಲ್ಲಾ ಸಾರಿಗೆ ನಿಯಂತ್ರಣಾಧಿಕಾರಿ ಕೆ.ಎಸ್. ವಿಶ್ವನಾಥ್ ಮಾತನಾಡಿ, ಆಪೆ ಆಟೊ ಹಾವಳಿಯಿಂದ ಗ್ರಾಮೀಣ ರಾಜ್ಯ ಸಾರಿಗೆ ಸಂಸ್ಥೆಯ ಆದಾಯಕ್ಕೆ ಪೆಟ್ಟು ಬೀಳುತ್ತಿದೆ. ಗ್ರಾಮೀಣ ಭಾಗದಲ್ಲಿ ನಿಯಮಗಳನ್ನು ಮೀರಿ ಚಾಲಕರು ಮನಬಂದಂತೆ ಆಟೊ ಓಡಿಸುತ್ತಿದ್ದಾರೆ.
ಈ ವಿಚಾರವಾಗಿ ಆರ್.ಟಿ.ಓ ಉನ್ನತಾಧಿಕಾರಿಗಳಿಗೆ ಪತ್ರ ಬರೆದು ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.ತಾಲ್ಲೂಕಿನ ಇಗ್ಗಲೂರು ಮತ್ತು ಗರಕಳ್ಳಿ ಬಸ್ ಸಂಚಾರದ ಮಾರ್ಗದಲ್ಲಿ ವರ್ಷಕ್ಕೆ ಸುಮಾರು 7 ಲಕ್ಷ ರೂ. ನಷ್ಟವಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ವಿದ್ಯಾರ್ಥಿಗಳು ಬಿಟ್ಟರೆ ದೊಡ್ಡವರು ಬಸ್ನಲ್ಲಿ ಪ್ರಯಾಣಿಸುವುದಿಲ್ಲ. ಸುರಕ್ಷಿತ ಪ್ರಯಾಣದ ಬಗ್ಗೆ ಯಾರೂ ಯೋಚಿಸುತ್ತಿಲ್ಲ ಎಂದು ಅವರು ವಿಷಾದಿಸಿದರು.
ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಹಾಗೂ ಕುಡಿಯುವ ನೀರಿನ ಸೌಲಭ್ಯವಿಲ್ಲದಿರುವುದನ್ನು ಪ್ರಯಾಣಿಕರು ಅಧಿಕಾರಿಗಳ ಗಮನಕ್ಕೆ ತಂದರು. ಸಾರಿಗೆ ಸಂಸ್ಥೆಯ ಬಸ್ಗಳು ಹೆದ್ದಾರಿ ಬದಿಯಲ್ಲೇ ನಿಲ್ಲಿಸುತ್ತಾರೆ. ಬಸ್ ನಿಲ್ದಾಣದ ಒಳಗಡೆ ಬರುವುದಿಲ್ಲ. ಇದರಿಂದ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುವ ಪ್ರಯಾಣಿಕರಿಗೆ ತೊಂದರೆಯಾಗಿದೆ ಎಂದು ದೂರಿದರು.
ಈ ಸಂದರ್ಭದಲ್ಲಿ ಕೆ.ಎಸ್.ಆರ್.ಟಿ.ಸಿ. ಸ್ಥಳೀಯ ಘಟಕದ ವ್ಯವಸ್ಥಾಪಕ ಸಂತೋಷ್ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ರೇಷ್ಮಾಭಾನು ಉಪಾಧ್ಯಕ್ಷ ಕೆ.ಎಲ್.ಕುಮಾರ್, ಸಂಚಾರಿ ನಿರೀಕ್ಷಕ ನಾರಾಯಣಪ್ಪ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.