ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಇದೇ 29ರಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹುಬ್ಬಳ್ಳಿಗೆ ಬರಲಿದ್ದಾರೆ.
`ಪ್ರಧಾನಿಗಳ ಕಾರ್ಯಕ್ರಮ ಸಿದ್ಧವಾಗಿದೆ. ಅಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಹುಬ್ಬಳ್ಳಿಗೆ ಬರಲಿರುವ ಅವರು ನೆಹರೂ ಮೈದಾನದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಂತರ ನೇರವಾಗಿ ಬೆಂಗಳೂರಿಗೆ ತೆರಳುವರು' ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಂ.ಎಂ. ಹಿಂಡಸಗೇರಿ `ಪ್ರಜಾವಾಣಿ'ಗೆ ತಿಳಿಸಿದರು. ಗುರುವಾರ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಯಿತು.
ಇಂದು ಎಸ್ಪಿಜಿ ಭೇಟಿ: ಪ್ರಧಾನಿ ಕಾರ್ಯಕ್ರಮದ ಸಂಬಂಧ ವಿಶೇಷ ಭದ್ರತಾ ದಳ (ಎಸ್ಪಿಜಿ) ಅಧಿಕಾರಿಗಳು ಶುಕ್ರವಾರ ನೆಹರೂ ಮೈದಾನಕ್ಕೆ ಭೇಟಿ ನೀಡಲಿದ್ದು ಪರಿಶೀಲನೆ ಮಾಡಿ ಕಾರ್ಯಕ್ರಮವನ್ನು ಅಂತಿಮಗೊಳಿಸಲಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.