ಕೋಲಾರ: ಜಿಲ್ಲೆಯ 300 ಹಳ್ಳಿಗಳಲ್ಲಿ ಕುಡಿ ಯುವ ನೀರಿನ ಸಮಸ್ಯೆ ಇದೆ. ಅದನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಇದೇ ವೇಳೆ, ಏಪ್ರಿಲ್ ವೇಳೆಗೆ ಎದುರಾಗುವ ಸಮಸ್ಯೆ ಯನ್ನು ನಿಭಾಯಿಸಲು ಈಗಲೇ ಕ್ರಿಯಾಯೋಜನೆ ತಯಾರಿಸಲು ಸಿದ್ಧತೆ ನಡೆದಿದೆ ಎಂದು ಜಿಲ್ಲಾ ಪಂಚಾಯತಿಯ ನೂತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ.ರಾಜೇಂದ್ರಚೋಳನ್ ತಿಳಿಸಿದರು.
ನಗರದ ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ ಸಂಜೆ ಸುದ್ದಿಗಾರರೊಡನೆ ಮಾತನಾಡಿದ ಅವರು, ಕೆಲವೇ ದಿನಗಳ ಹಿಂದೆ ಅಧಿಕಾರ ವಹಿಸಿ ಕೊಂಡಿರುವೆ. ತಾಲ್ಲೂಕು ಪಂಚಾಯಿತಿಗಳ ಮಟ್ಟ ದಲ್ಲಿ ಅಧಿಕಾರಿಗಳ ಸಭೆ ನಡೆಸಿ ಕುಡಿಯುವ ನೀರಿನ ಸಮಸ್ಯೆಯ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದಿರುವೆ. ಕೋಲಾರ ಮತ್ತು ಬಂಗಾರಪೇಟೆ ತಾಲ್ಲೂಕಿನಲ್ಲಿ ಸಮಸ್ಯೆ ತೀವ್ರವಾಗಿದೆ. ಮುಂದಿನ ದಿನಗಳಲ್ಲಿ ಸಮಸ್ಯೆ ನಿವಾರಣೆಗೆ ಶ್ರಮಿಸುವೆ ಎಂದು ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆಯನ್ನು ನಿಭಾಯಿಸಲು ಎಲ್ಲರ ಸಹಕಾರ ಅಗತ್ಯ. ಒಬ್ಬರಿಂದ ಸಮಸ್ಯೆ ಪರಿಹಾರ ಸಾಧ್ಯವಿಲ್ಲ. ಹೀಗಾಗಿ ಹೋಬಳಿ, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ. ಕಂಟ್ರೋಲ್ ರೂಂಗಳನ್ನು ಸ್ಥಾಪಿಸಲಾಗಿದೆ ಎಂದರು.
ಹೋಬಳಿ ಮಟ್ಟದಲ್ಲಿ ಐವರ ತಂಡ ರಚಿಸಲಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಜಿ.ಪಂ. ಕಿರಿಯ ಎಂಜಿನಿಯರ್, ವಾಟರ್ಮನ್ಗಳು, ಬೆಸ್ಕಾಂ ಸಿಬ್ಬಂದಿ ಮತ್ತ ಕಂದಾಯ ಇಲಾಖೆಯ ಸಿಬ್ಬಂದಿ ತಂಡ ಪ್ರತಿಗ್ರಾಮಕ್ಕೂ ತೆರಳಿ ಸಮಸ್ಯೆಗಳನ್ನು ಅವಲೋಕಿಸಿ ಕ್ರಮ ಕೈಗೊಳ್ಳಲಿದೆ. ಅದೇ ರೀತಿ ತಾಲ್ಲೂಕು ಮಟ್ಟದಲ್ಲಿ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ, ತಹಶೀಲ್ದಾರ್ ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಇರುವ ತಂಡವನ್ನು ರಚಿಸ ಲಾಗಿದೆ. ಪ್ರತಿ ಹೋಬಳಿಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ ಎಂದು ತಿಳಿಸಿದರು.
ಕಂಟ್ರೋಲ್ ರೂಂ: ಇಲ್ಲಿ ಬೆಳಿಗ್ಗೆ 9ರಿಂದ ರಾತ್ರಿ 10ರ ವರೆಗೆ ಸಿಬ್ಬಂದಿ ಹಾಜರಿದ್ದು ದೂರುಗಳನ್ನು ಸ್ವೀಕರಿಸುತ್ತಾರೆ. ದೂರು ಸ್ವೀಕರಿಸಿದ ಒಂದು ದಿನದೊಳಗೆ ಕ್ರಮ ಕೈಗೊಳ್ಳುವ ವ್ಯವಸ್ಥೆ ರೂಪಿಸ ಲಾಗಿದೆ.
ನೀರಿನ ಸಮಸ್ಯೆ ಎದುರಿಸುತ್ತಿರುವ ಹಳ್ಳಿಗಳ ಮಂದಿ ಜಿಪಂನಲ್ಲಿರುವ ಕಂಟ್ರೋಲ್ ರೂಂ ಅನ್ನು 240173 ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದು ಎಂದರು.
ಹಣದ ಕೊರತೆ ಇಲ್ಲ: ಸಮಸ್ಯೆ ನಿವಾರಣೆಗೆ ಹಣದ ಕೊರತೆ ಇಲ್ಲ. ಸರ್ಕಾರ ಈಗಾಗಲೇ ಸಾಕಷ್ಟು ಅನುದಾನ ಬಿಡುಗಡೆ ಮಾಡಿದೆ. ಈಗಾಗಲೇ ಕಳಿಸಿರುವ ಪ್ರಸ್ತಾವನೆಯ ಜೊತೆಗೆ, ಫೆಬ್ರುವರಿ-ಮಾರ್ಚ್ನೊಳಗೆ ಮತ್ತೊಂದು ಕ್ರಿಯಾ ಯೋಜನೆ ತಯಾರಿಸಿ ಸರ್ಕಾರಕ್ಕೆ ಕಳಿಸಲಾಗು ವುದು. ಈಗಿನಿಂದಲೇ ಪ್ರಯತ್ನಿಸಿದರೆ ಮುಂದಿನ ತಿಂಗಳುಗಳಲ್ಲಿ ಸಮಸ್ಯೆಯನ್ನು ಸುಲಭವಾಗಿ ಎದುರಿಸಬಹುದು ಎಂದರು.
ಮುದುವತ್ತಿಯಲ್ಲಿ ನೀರಿನ ಸಮಸ್ಯೆ ನಿವಾರಿಸಲು ಹೊಸ ಕೊಳವೆಬಾವಿ ಕೊರೆಯಲಾಗಿದ್ದು, ನಾಳೆಯೇ ಪಂಪ್ ಮೋಟರ್ ಅಳವಡಿಸ ಲಾಗುವುದು ಎಂದು ಸ್ಥಳದಲ್ಲಿದ್ದ ಜಿ.ಪಂ. ಕಾರ್ಯಪಾಲಕ ಎಂಜಿನಿಯರ್ ದೇವರಾಜ್ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.