4 ತಿಂಗಳಲ್ಲಿ ಸಂಚಾರ ದಟ್ಟಣೆಗೆ ಪರಿಹಾರ

ಬೆಂಗಳೂರು: ‘ಟಿನ್ ಫ್ಯಾಕ್ಟರಿ ಜಂಕ್ಷನ್ ನಿಂದ ಇಬ್ಬಲೂರು ಜಂಕ್ಷನ್ ವರೆಗಿನ ವರ್ತುಲ ರಸ್ತೆಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಬಗೆಹರಿಸಲು ಬಿಡಿಎ ಅಧಿಕಾರಿಗಳ ಜತೆಗೆ ಸಮಾಲೋಚನೆ ನಡೆಸಲಾಗಿದೆ. ನಾಲ್ಕು ತಿಂಗಳಲ್ಲಿ ಸಮಸ್ಯೆ ಬಗೆಹರಿಸಲಾಗುವುದು’ ಎಂದು ಸಂಚಾರ ಪೊಲೀಸ್ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಡಾ.ಎಂ.ಎ. ಸಲೀಂ ತಿಳಿಸಿದರು.
ಕೃಷ್ಣರಾಜಪುರದ ಹಳೆಮದ್ರಾಸ್ ರಸ್ತೆಯಲ್ಲಿನ ಟ್ರಾಫಿಕ್ ಸಮಸ್ಯೆಯನ್ನು ಶಾಸಕ ಭೈರತಿ ಬಸವರಾಜು ಅವರೊಂದಿಗೆ ಗುರುವಾರ ಪರಿಶೀಲಿಸಿ ಮಾತನಾಡಿದರು. ಇಬ್ಬರೂ ಎರಡು ಕಿ.ಮೀ. ಕಾಲ್ನಡಿಗೆಯಲ್ಲಿ ಸಾಗಿ ಪರಿಶೀಲಿಸಿದರು.
ಭೈರತಿ ಬಸವರಾಜು ಮಾತನಾಡಿ, ‘ಕೃಷ್ಣರಾಜಪುರದ ರೈಲ್ವೆ ನಿಲ್ದಾಣ, ಟಿನ್ ಫ್ಯಾಕ್ಟರಿ ಜಂಕ್ಷನ್ನಲ್ಲಿ ಪ್ರತಿದಿನ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಕೃಷ್ಣರಾಜಪುರದ ಬಿಬಿಎಂಪಿ ಕಚೇರಿ ಎದುರು ಸಹ ಇದೇ ರೀತಿಯ ಸಮಸ್ಯೆ ಉಂಟಾಗುತ್ತಿದೆ. ಸಮಸ್ಯೆ ಬಗೆಹರಿಸಲು ಹೊಸದಾಗಿ ಎರಡು ಕಡೆಗಳಲ್ಲಿ ಸಿಗ್ನಲ್ ಅಳವಡಿಸಬೇಕು’ ಎಂದು ಮನವಿ ಮಾಡಿದರು.
ದೇವಸಂದ್ರ ವಾರ್ಡ್ನ ಬಿಬಿಎಂಪಿ ಸದಸ್ಯ ಶ್ರೀಕಾಂತ ಮಾತನಾಡಿ, ‘ಕೃಷ್ಣರಾಜಪುರ ಮುಖ್ಯರಸ್ತೆಯ ಅಕ್ಕಪಕ್ಕದ ಹೋಟೆಲ್ ಮಾಲೀಕರಿಂದ ಸ್ಥಳೀಯ ಸಂಚಾರ ಪೊಲೀಸರು ತಲಾ ₹1 ಸಾವಿರ ಲಂಚ ಪಡೆದು ರಸ್ತೆಯಲ್ಲೇ ವಾಹನಗಳ ನಿಲುಗಡೆಗೆ ಅವಕಾಶ ನೀಡುತ್ತಿದ್ದಾರೆ. ಇದರಿಂದಾಗಿ ಹಳೆ ಮದ್ರಾಸ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.