ಉಡುಪಿ: 2013–-14ನೇ ಸಾಲಿನ ಮುಂಗಾರು ಹಂಗಾಮಿಗೆ ಒಟ್ಟು 45 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬತ್ತದ ಬೆಳೆ ಬೆಳೆಯಲು ಗುರಿ ಇರಿಸಿಕೊಂಡಿದ್ದು, 44,400 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಕಳೆದ ವರ್ಷದ ಮುಂಗಾರು ಹಂಗಾಮಿನಲ್ಲಿ 44,563 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ.
ಈ ವರ್ಷ ಉಡುಪಿ ತಾಲ್ಲೂಕಿನಲ್ಲಿ 17,900 ಹೆಕ್ಟೇರ್, ಕುಂದಾಪುರದಲ್ಲಿ 18 ಸಾವಿರ ಹೆಕ್ಟೇರ್ ಹಾಗೂ ಕಾರ್ಕಳದಲ್ಲಿ 8,500 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ 44,400 ಹೆಕ್ಟೇರ್ ಪ್ರದೇಶದಲ್ಲಿ ಖುಷ್ಕಿ ಬೆಳೆಗಳಲ್ಲಿ ಉತ್ಪಾದನೆ ವೃದ್ಧಿಸುವ ತಾಂತ್ರಿಕತೆಗಳನ್ನೊಳಗೊಂಡ ಭೂಚೇತನ ಯೋಜನೆ ಯನ್ನು ಜಿಲ್ಲೆಯಲ್ಲಿ ಅನುಷ್ಠಾನ ಗೊಳಿಸಲಾಗಿದೆ.
ಜಿಲ್ಲೆಯ ರಸಗೊಬ್ಬರಗಳ ದಾಸ್ತಾನು ಸಮರ್ಪಕವಾಗಿದ್ದು, ಪ್ರಸ್ತುತ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ, ಕುಂದಾಪುರ ಶಾಖೆ, ಸಹಕಾರಿ ಹಾಗೂ ಖಾಸಗಿ ಮಾರಾಟ ಮಳಿಗೆಗಳಲ್ಲಿ 1,517.66 ಮೆಟ್ರಿಕ್ ಟನ್ ವಿವಿಧ ರಸಗೊಬ್ಬರಗಳು ದಾಸ್ತಾನಿದೆ ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಸಮೀಪದ ಹೋಬಳಿ ಮಟ್ಟ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು.