ಹಾಸನ: `ಬರದ ಪರಿಣಾಮವಾಗಿ ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿ ಯುವ ನೀರು ಮತ್ತು ದನಕರುಗಳಿಗೆ ಮೇವಿನ ಅಭಾವ ಉಂಟಾದಲ್ಲಿ ಮಾಹಿತಿ ದೊರೆತ 48 ಗಂಟೆಯೊಳಗೆ ಆದ್ಯತೆಯ ಮೇಲೆ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು~ ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನ್ ರಾಜ್ ತಿಳಿಸಿದರು.
ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಕರೆದಿದ್ದ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಸೇರಿ ಜಿಲ್ಲೆಯ ಜನರಿಗೆ ತುರ್ತು ಮೂಲಭೂತ ಸೌಲಭ್ಯಗಳನ್ನು ದೊರಕಿಸಲು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಅದರಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ತಮಗೆ ವಹಿಸುವ ಕೆಲಸ ಕಾರ್ಯಗಳನ್ನು ತ್ವರಿತವಾಗಿ ಮತ್ತು ಕ್ರಮಬದ್ಧವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಮುಂದಿನ ಆರ್ಥಿಕ ವರ್ಷದಿಂದ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮ ಗಾರಿಗಳು ಮತ್ತು ಕೆಲಸ ಕಾರ್ಯಗಳ ಬಗ್ಗೆ ವಿವರವಾಗಿ ಚರ್ಚಿಸಿ ಕ್ರಮ ಕೈಗೊಳ್ಳುವ ಉದ್ದೇಶದಿಂದ ಪ್ರತಿ ದಿನ 5 ಇಲಾಖೆಗಳಂತೆ ಅಧಿಕಾರಿಗಳ ಸಭೆ ಕರೆದು ಪ್ರಗತಿ ಪರಿಶೀಲಿಸ ಲಾಗು ವುದು.
ಇದರಿಂದ ಒಂದೇ ಬಾರಿಗೆ ಎಲ್ಲ ಇಲಾಖೆ ಅಧಿಕಾರಿಗಳ ಸಭೆ ಕರೆದು ಎಲ್ಲರ ಸಮಯ ವ್ಯರ್ಥಮಾಡುವುದು ತಪ್ಪುತ್ತದೆ ಜತೆಗೆ ಪ್ರತಿ ಇಲಾಖೆಯ ಕಾರ್ಯವೈಖರಿಯನ್ನೂ ವಿಸ್ತೃತವಾಗಿ ಪರಿಶೀಲನೆ ಮಾಡಬಹುದು ಎಂದರು.
ಪರಿಶಿಷ್ಟ ಜಾತಿ/ಪಂಗಡ, ಬಿ.ಸಿ.ಎಂ., ಮತ್ತಿತರ ವಿದ್ಯಾರ್ಥಿ ವಸತಿ ನಿಲಯಗಳನ್ನು ವ್ಯವಸ್ಥಿತವಾಗಿ ಇಟ್ಟುಕೊಳ್ಳುವಂತೆ ಸಂಬಂಧಪಟ್ಟ ಇಲಾಖಾಧಿಕಾ ರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಸರ್ಕಾರ ವಿದ್ಯಾರ್ಥಿ ನಿಲಯಗಳಿಗೆ ಸಾಕಷ್ಟು ಆರ್ಥಿಕ ನೆರವು ಕೊಡುತ್ತಿದೆ. ವಿದ್ಯಾರ್ಥಿಗಳಿಗೆ ಉತ್ತಮ ಊಟ, ವಸತಿ, ಕುಡಿಯುವ ನೀರು ಮತ್ತಿತರ ಮೂಲಭೂತ ಸೌಕರ್ಯಗಳನ್ನು ದೊರಕಿಸಿಕೊಟ್ಟು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಮುಂದಾಗುವಂತೆ ಅವರು ಅಧಿಕಾರಿಗಳಿಗೆ ತಿಳಿಸಿದರು.
ನಗರದ ಸ್ವಚ್ಛತೆಗೆ ಆದ್ಯತೆ ನೀಡುವಂತೆ ನಗರಸಭೆ ಅಧಿಕಾರಿಗೆ ಸೂಚನೆ ನೀಡಿದರು. ಹಾಸನ ನಗರದಲ್ಲಿ ಯುಜಿಡಿ ವ್ಯವಸ್ಥೆ ಇದ್ದರೂ ವಿಪರೀತ ಸೊಳ್ಳೆಗಳಿವೆ. ನಗರಸಭೆ ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದರು.
ಪ್ರತಿ ಇಲಾಖೆ ಅಧಿಕಾರಿ ತಮ್ಮ ಇಲಾಖೆ ವ್ಯಾಪ್ತಿಯ ಪ್ರಗತಿಯ ಅಂಕಿ ಅಂಶಗಳನ್ನು ನಿಖರವಾಗಿ ತಿಳಿದುಕೊಂಡಿದ್ದರೆ ಸಭೆಗಳಲ್ಲಿ ಕೂಡಲೇ ಮಾಹಿತಿ ನೀಡಲು ಅನುಕೂಲವಾಗುತ್ತದೆ. ಇಲಾಖೆಗಳಿಗೆ ಬಿಡುಗಡೆಯಾಗುವ ಅನುದಾನ ಆರ್ಥಿಕ ವರ್ಷದೊಳಗೆ ವೆಚ್ಚ ಮಾಡದಿದ್ದರೆ ಮುಂದುವರಿಯುವುದೇ ಅಥವಾ ಮರಳಿ ಸರ್ಕಾರಕ್ಕೆ ಹೋಗುತ್ತದೆಯೇ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇರಬೇಕು.
ಇಲಾಖೆಗೆ ಬಂದ ಹಣ ಖರ್ಚಾಗದೆ ವಾಪಸ್ ಸರ್ಕಾರಕ್ಕೆ ಹೋಗದಂತೆ ಸದ್ಬಳಕೆ ಕೋಡಿಕೊಳ್ಳುವ ಜವಾಬ್ದಾರಿ ಆಯಾ ಇಲಾಖೆಯವರದ್ದಾಗಿರುತ್ತದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಟಿ. ಅಂಜನ್ ಕುಮಾರ್ ವಿವಿಧ ಇಲಾಖೆಗಳ ಮಾಹಿತಿ ಒದಗಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.