ಯಲಹಂಕ: ಪೊಲೀಸ್ ತರಬೇತಿ ಸಾಮರ್ಥ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಆರು ನೂತನ ಪೊಲೀಸ್ ತರಬೇತಿ ಶಾಲೆಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಗೃಹಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಇಲ್ಲಿನ ಸಶಸ್ತ್ರ ಪೊಲೀಸ್ ತರಬೇತಿ ಶಾಲೆಯಲ್ಲಿ ನಡೆದ 28ನೇ ತಂಡದ ಸಶಸ್ತ್ರ ಪೊಲೀಸ್ ಕಾನ್ಸ್ಟೆಬಲ್ಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಗೌರವವಂದನೆ ಸ್ವೀಕರಿಸಿ ಮಾತನಾಡಿದ ಅವರು, ಚಿಕ್ಕಮಗಳೂರು ಜಿಲ್ಲೆಯ ಕಡೂರು, ಬೆಂಗಳೂರು, ಚಿತ್ರದುರ್ಗ, ಮೈಸೂರು, ಹುಬ್ಬಳ್ಳಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಮೂರು ವರ್ಷದ ಒಳಗೆ ನೂತನ ಪೊಲೀಸ್ ತರಬೇತಿ ಶಾಲೆಗಳನ್ನು ತೆರೆಯಲು ನಿರ್ಧರಿಸ ಲಾಗಿದೆ ಎಂದರು.
ಪೊಲೀಸ್ ಇಲಾಖೆಗೆ ಹೊಸದಾಗಿ 8,500 ಕಾನ್ಸ್ಟೆಬಲ್ಗಳನ್ನು ನೇಮಕ ಮಾಡಲಾಗುತ್ತಿದ್ದು, ಇದರಲ್ಲಿ ಶೇ.20ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿರಿಸಲಾ ಗುವುದು. ಅಲ್ಲದೆ ಗುಡ್ಡಗಾಡು ಮತ್ತು ಬುಡಕಟ್ಟು ಜನಾಂಗದವರಿಗೂ ನೇಮಕಾತಿಯಲ್ಲಿ ವಿಶೇಷ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಪೊಲೀಸ್ ಮಹಾನಿರ್ದೇಶಕ(ತರಬೇತಿ) ಕೆ.ಎಸ್.ಆರ್.ಚರಣ್ರೆಡ್ಡಿ ಮಾತನಾಡಿ, 28ನೇ ತಂಡದಲ್ಲಿ 455 ಸಶಸ್ತ್ರ ಪೊಲೀಸ್ ಪ್ರಶಿಕ್ಷಣಾರ್ಥಿಗಳಿದ್ದು, ಇದು ಈ ತರಬೇತಿಶಾಲೆಯ ಅತಿದೊಡ್ಡ ನಿರ್ಗಮನ ಪಥಸಂಚಲನವಾಗಿದೆ. ಇವರು ರಾಜ್ಯದ 12 ವಿವಿಧ ಘಟಕಗಳಿಗೆ ಸೇರಿದವರಾಗಿದ್ದು, ಮುಂದೆ ಆಯಾ ಘಟಕಗಳ ಸಶಸ್ತ್ರ ಮೀಸಲು ಪಡೆಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಾಗುತ್ತಾರೆ ಎಂದು ಹೇಳಿದರು.
ತರಬೇತಿ ಅವಧಿಯಲ್ಲಿ ಒಳಾಂಗಣ, ಹೊರಾಂಗಣ ಹಾಗೂ ಫೈರಿಂಗ್ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆಗೈದ ಪ್ರಶಿಕ್ಷಣಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸದಾಶಿವ ಬಗಲಿ ಅವರಿಗೆ ಸರ್ವೋತ್ತಮ ಪ್ರಶಿಕ್ಷಣಾರ್ಥಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಜ್ಯ ಪೊಲೀಸ್ ಮಹಾನಿರ್ದೇಶಕ ಲಾಲ್ರುಖುಮಾ ಪಚಾವೋ, ಪೊಲೀಸ್ ಮಹಾನಿರ್ದೇಶಕ(ತರಬೇತಿ) ಸುಶಾಂತ್ ಮಹಾಪಾತ್ರ ಮತ್ತಿತರರು ಹಾಜರಿದ್ದರು.
ತನಿಖೆ ಪ್ರಗತಿಯಲ್ಲಿ
ಎಟಿಎಂ ಕೇಂದ್ರದಲ್ಲಿ ಮಹಿಳೆ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದ್ದು, ಆರೋಪಿಯು ಹೊರರಾಜ್ಯದಲ್ಲಿ ತಲೆಮರೆಸಿಕೊಂಡಿರು ವುದರಿಂದ ಆತನನ್ನು ಬಂಧಿಸಲು ವಿಳಂಬವಾಗುತ್ತಿದೆ ಎಂದು ಗೃಹಸಚಿವ ಜಾರ್ಜ್ ಹೇಳಿದರು.
ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಯನ್ನು ಶೀಘ್ರದಲ್ಲೆ ಬಂಧಿಸುವ ನಿಟ್ಟಿನಲ್ಲಿ ಹೊರರಾಜ್ಯದ ಪೊಲೀಸರೊಂದಿಗೆ ರಾಜ್ಯ ಪೊಲೀಸರು ನಿರಂತರವಾಗಿ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.