ಬೆಂಗಳೂರು: ಮಹಿಳೆಯೊಬ್ಬರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬೆದರಿಸಿ 62 ಸಾವಿರ ನಗದು ಹಾಗೂ ಮೊಬೈಲ್ ಫೋನ್ ದರೋಡೆ ಮಾಡಿರುವ ಘಟನೆ ಬಾಣಸವಾಡಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ತ್ರಿಪುರಾ ಮೂಲದ ಪ್ರತಿಮಾನಾಥ್ ಎಂಬುವರು ಈ ಸಂಬಂಧ ದೂರು ಕೊಟ್ಟಿದ್ದಾರೆ. ಅವರು ಕಮ್ಮನಹಳ್ಳಿಯಲ್ಲಿ ನೆಲೆಸಿರುವ ಸಹೋದರಿ ಪ್ರಿಯಾಂಕಾ ಅವರ ಮನೆಗೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕಮರ್ಷಿಯಲ್ ಸ್ಟ್ರೀಟ್ಗೆ ಹೊರಟಿದ್ದ ಪ್ರಿಯಾಂಕಾ ಮತ್ತು ಪ್ರತಿಮಾನಾಥ್ ಅವರು ಬಾಣಸವಾಡಿ ನಾಲ್ಕನೇ ಮುಖ್ಯರಸ್ತೆಯಲ್ಲಿ ರಾತ್ರಿ ಆಟೊಗೆ ಕಾಯುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಬೈಕ್ನಲ್ಲಿ ಬಂದಿದ್ದ ಇಬ್ಬರು ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಬೆದರಿಸಿ ಹಣ, ಮೊಬೈಲ್ ಫೋನ್ ಮತ್ತು ಮತದಾರರ ಗುರುತಿನ ಚೀಟಿಯನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಖ್ಯ ಕಾನ್ಸ್ಟೇಬಲ್ಗಳಿಗೆ ಬಡ್ತಿ
ನಗರದ ವಿವಿಧ ಪೊಲೀಸ್ ಠಾಣೆಗಳ 200 ಮಂದಿ ಮುಖ್ಯ ಕಾನ್ಸ್ಟೇಬಲ್ಗಳಿಗೆ ಎಎಸ್ಐ ಹುದ್ದೆಗೆ ಬಡ್ತಿ ನೀಡಿ ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.
ಬಡ್ತಿ ಪಡೆದ ಸಿಬ್ಬಂದಿಗೆ ಸೂಚಿಸಲಾದ ಠಾಣೆಗಳಲ್ಲಿ ಮಂಗಳವಾರದಿಂದಲೇ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಮಿರ್ಜಿ ಆದೇಶದಲ್ಲಿ ತಿಳಿಸಿದ್ದಾರೆ.