ಚಿಕ್ಕಬಳ್ಳಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಮಟ್ಟದ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜ.6ರಂದು ಆಯೋಜಿಸಲಾಗಿದ್ದು, ವಿವಿಧ ಜಿಲ್ಲೆಗಳಿಂದ ಭಾರಿ ಸಂಖ್ಯೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪಕ್ಷದ ಪರಿಶಿಷ್ಟ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಎನ್.ಮಂಜುನಾಥ್ ತಿಳಿಸಿದರು.
ಪರಿಶಿಷ್ಟ ವಿಭಾಗವನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯಮಟ್ಟದ ಸಮಾವೇಶ ಆಯೋಜಿಸಲಾಗುತ್ತಿದೆ. ರಾಜ್ಯದ ಎಲ್ಲ ಜಿಲ್ಲೆ ಮತ್ತು ಪ್ರದೇಶಗಳಿಂದಲೂ ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದು, ಪಕ್ಷದ ಅಧ್ಯಕ್ಷ ಡಾ. ಜಿ.ಪರಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಷ್ಟ್ರಮಟ್ಟದ ನಾಯಕರು ಮತ್ತು ಸಚಿವರು ಭಾಗವಹಿಸಲಿದ್ದಾರೆ ಎಂದು ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪರಿಶಿಷ್ಟ ವಿಭಾಗದಲ್ಲಿ ಎಡ, ಬಲವೆಂದು ವಿಂಗಡಣೆ ಮಾಡದೆ ಎಲ್ಲರೂ ಒಂದು ಮತ್ತು ಸಮಾನರೆಂದು ಪರಿಗಣಿಸುತ್ತೇವೆ. ಯಾವುದೇ ಸಮುದಾಯಕ್ಕೆ ಅನ್ಯಾಯವಾದರೂ ಅದನ್ನು ನಾವು ಸಹಿಸುವುದಿಲ್ಲ. ಸಮುದಾಯಕ್ಕೆ ನ್ಯಾಯ ದೊರೆಯುವವರೆಗೆ ನಾವು ಹೋರಾಟ ಮುಂದುವರಿಸುತ್ತೇವೆ. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಲೆಂದೇ ನಾವು ಸಮಾವೇಶ ಆಯೋಜಿಸುತ್ತಿದ್ದೇವೆ ಎಂದು ಅವರು ತಿಳಿಸಿದರು.
ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೊಂಡು ಉಪಮುಖ್ಯಮಂತ್ರಿ ಸ್ಥಾನವನ್ನು ಡಾ.ಜಿ.ಪರಮೇಶ್ವರ್ ಅವರಿಗೆ ಕೊಟ್ಟರೆ ನಮ್ಮದೇನೂ ಅಭ್ಯಂತರವಿಲ್ಲ. ಪಕ್ಷದ ಗೆಲುವಿಗೆ ಮತ್ತು ಬಲಪಡಿಸಲು ಅವರು ಸಾಕಷ್ಟು ದುಡಿದಿದ್ದು, ಸರ್ಕಾರದಲ್ಲಿ ಪ್ರಮುಖ ಹುದ್ದೆ ಕೊಟ್ಟರೆ ನಮಗೆ ಸಂತಸವಾಗುತ್ತದೆ ಎಂದು ಅವರು ತಿಳಿಸಿದರು.
ಮಾಜಿ ಶಾಸಕರಾದ ಅನಸೂಯಮ್ಮ ನಟರಾಜನ್, ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ವಿ.ಕೃಷ್ಣಪ್ಪ, ಸಂಚಾಲಕರಾದ ಸಂದೀಪ್ ಚಕ್ರವರ್ತಿ, ಪಲ್ಲವಿ ಮತ್ತಿತರರು ಉಪಸ್ಥಿತರಿದ್ದರು.