ಸವದತ್ತಿ: `ಕೆಲವೊಂದು ಕ್ಷೇತ್ರಗಳಿಗೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂದು ಹೇಳುವುದು ಸರಿಯಲ್ಲ. ಇಂಥ ಮೂಢನಂಬಿಕೆಗಳಿಗೆ ತಿಲಾಂಜಲಿ ಇಡಬೇಕು ಎಂದು ನಿರ್ಧರಿಸಿರುವ ನಾನು ಅಂಥ ಎಲ್ಲ ಕ್ಷೇತ್ರಗಳಿಗೆ ಭೇಟಿ ನೀಡುತ್ತೇನೆ' ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಶುಕ್ರವಾರ ಇಲ್ಲಿ ಹೇಳಿದರು.
ತಾಲ್ಲೂಕಿನಲ್ಲಿ ವಿವಿಧ ಇಲಾಖೆಗಳ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
`ಕಿತ್ತೂರು ಉತ್ಸವ, ಸವದತ್ತಿ ಕ್ಷೇತ್ರಕ್ಕೆ ಹೋದರೆ ಮುಖ್ಯಮಂತ್ರಿ ಹುದ್ದೆ ಕಳೆದುಕೊಳ್ಳಬೇಕಾಗುತ್ತದೆ ಎಂಬ ಪ್ರತೀತಿ ಇದೆ. ಆದರೆ ಅಧಿಕಾರ ಶಾಶ್ವತವಲ್ಲ. ರಾಜ್ಯದ ಹಿಂದಿನ ಅನೇಕ ಮುಖ್ಯಮಂತ್ರಿಗಳು ಅಧಿಕಾರಕ್ಕೆ ಅಂಟಿಕೊಂಡು ಕೆಲವು ಕ್ಷೇತ್ರಗಳಿಗೆ ಹೋಗಿಲ್ಲ. ಅಂಥ ಎಲ್ಲ ಕ್ಷೇತ್ರಗಳಿಗೆ ಹೋಗಲು ನಿರ್ಧರಿಸಿದ್ದೇನೆ. ಉತ್ತಮ ಕೆಲಸ ಮಾಡಿದರೆ ಯಾವುದಕ್ಕೂ ಹೆದರಬೇಕಿಲ್ಲ' ಎಂದು ಅವರು ತಿಳಿಸಿದರು. ` 9 ರಂದು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತೇನೆ' ಎಂದರು.