ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಕನಿಷ್ಠ ರೂ 10 ಸಾವಿರ ವೇತನಕ್ಕೆ ಒತ್ತಾಯ
Last Updated 11 ಜನವರಿ 2014, 6:14 IST
ಅಕ್ಷರ ಗಾತ್ರ

ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ ರೂ 10 ಸಾವಿರ ವೇತನ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಅಂಗನವಾಡಿ ನೌಕರರ ಜಂಟಿ ಹೋರಾಟ ಸಮಿತಿ ಸದಸ್ಯರು ಶುಕ್ರವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಬೋಗಾರ್‌ವೇಸ್‌ದಿಂದ ಆರಂಭಿಸಿದ ಮೆರವಣಿಗೆಯು ಕಾಲೇಜು ರಸ್ತೆ, ಚನ್ನಮ್ಮ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಮೆರವಣಿಗೆ ಸಂದರ್ಭದಲ್ಲಿ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಐಸಿಡಿಎಸ್‌ ಖಾಸಗೀಕರಣ ಮಾಡಬಾರದು. ಈಗಿರುವ ಅಂಗನವಾಡಿ ಕಾರ್ಯಕರ್ತೆಯರ ಕೆಲಸ ವನ್ನು ಬೇರೆಯವರಿಗೆ ವರ್ಗಾಯಿಸಬಾರದು. ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸ ಿನಂತೆ ಕಾರ್ಯಕರ್ತೆಯರಿಗೆ ರು 15 ಸಾವಿರ ಹಾಗೂ ಸಹಾಯಕಿಯರಿಗೆ ರೂ 10 ಸಾವಿರ ವೇತನ ನೀಡಬೇಕು. ಐಸಿಡಿಎಸ್‌ ಅನ್ನು ಆಹಾರ ಭದ್ರತೆ ಕಾಯ್ದೆ ವ್ಯಾಪ್ತಿಗೆ ತರಬೇಕು. ಎಲ್ಲ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಕಾಯಂ ಶಿಶು ವಿಹಾರಗಳನ್ನಾಗಿಸಬೇಕು. ಶಾಲಾ ಪೂರ್ವ ಶಿಕ್ಷಣ ವನ್ನು ಶಿಕ್ಷಣ ಹಕ್ಕು ಕಾಯ್ದೆ 2009ರ ಅಡಿಯಲ್ಲಿ ತರಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಸರ್ಕಾರೇತರ ಸಂಘಟನೆಗಳ ಪಾಲುದಾರಿಕೆಯ ಹೆಸರಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಖಾಸಗೀಕರಣ ಮಾಡಬಾರದು. ಈಗಾಗಲೇ ರಾಜ್ಯದ 4 ಜಿಲ್ಲೆಗಳಲ್ಲಿ ವೇದಾಂತ ಫೌಂಡೇಶನ್‌ ಜೊತೆ ಮಾಡಿಕೊಂಡ ತಿಳಿವಳಿಕೆ ಒಪ್ಪಂದವನ್ನು ರದ್ದುಪಡಿಸಬೇಕು. ಸಾದಿಲ್ವಾರು ಹಣ, ಪ್ರಭಾರ ಹುದ್ದೆಯ ಗೌರವಧನ ಹೆಚ್ಚಿಸಬೇಕು. ಮಕ್ಕಳ ಸಂಖ್ಯೆಗೆ ಅಗತ್ಯವಿರುವಷ್ಟು ಗ್ಯಾಸ್‌ ಪೂರೈಸಬೇಕು. ಮಾರುಕಟ್ಟೆ ದರದಂತೆ ಹಣ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ದೇಶದಾದ್ಯಂತ ಎಲ್ಲ ಅಂಗನವಾಡಿ ಕಾರ್ಯ ಕರ್ತೆಯರು ಹಾಗೂ ಸಹಾಯಕಿಯರಿಗೆ ಏಕಪ್ರಕಾದ ಸೇವಾ ನಿಯಮಾವಳಿ ಮತ್ತು ಕೆಲಸದ ಸ್ಪಷ್ಟವಾದ ನಿರ್ದೇಶನ ನೀಡಬೇಕು. ಸಹಾ ಯಕಿಯರಿಗೆ ಹೆರಿಗೆ ರಜೆ ಸೌಲಭ್ಯ ವ್ಯವಸ್ಥಿತವಾಗಿ ಜಾರಿಗೆ ಬರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಗೌರವಧನ ಏಕಕಾಲದಲ್ಲಿ ಬರುವಂತೆ ಕ್ರಮ ತೆಗೆದುಕೊಳ್ಳಬೇಕು. ಶಾಲಾ ಸಿಬ್ಬಂದಿ ಗಿರುವಂತೆ ರಜಾ ಸೌಲಭ್ಯವನ್ನು ಅಂಗನವಾಡಿ ನೌಕರರಿಗೂ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ನಾಗೇಶ ಸಾತೇರಿ, ಪ್ರಕಾಶ ದೇಸಾಯಿ, ಯಲ್ಲುಬಾಯಿ ತೆಗ್ಗಿಹಳ್ಳಿ, ಮೀನಾಕ್ಷಿ ತೋಟಗಿ, ದೊಡ್ಡವ್ವ ಪೂಜಾರಿ, ಗೋದಾವರಿ ರಾಜಾಪುರ, ಪ್ರೇಮಾ ಕಿಲ್ಲೇದಾರ, ಜಿ.ಎಂ.ಜೈನೆಖಾನ, ಗಿರೀಶ ಶೆಟ್ಟಿ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು. ಪ್ರತಿಭಟನೆಯಲ್ಲಿ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT