ಯಲಹಂಕ: ಅಪೌಷ್ಠಿಕತೆ ತಡೆಗಟ್ಟಲು ಹಾಗೂ ಅಂಗನವಾಡಿ ಕೇಂದ್ರಗಳನ್ನು ಬಲವರ್ಧನೆಗೊಳಿಸುವ ಉದ್ದೇಶದಿಂದ ನೇಮಿಸಲಾಗಿರುವ ಎನ್.ಕೆ .ಪಾಟೀಲ್ ನೇತೃತ್ವದ ಆಯೋಗ ಗುರುವಾರ ಬೆಂಗಳೂರು ಉತ್ತರ ತಾಲ್ಲೂಕು ವ್ಯಾಪ್ತಿಯ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಇಲ್ಲಿನ ಚೌಡೇಶ್ವರಿ ರಸ್ತೆಯಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಆಯೋಗದ ಅಧ್ಯಕ್ಷರು ಅಂಗನವಾಡಿ ಕೇಂದ್ರದಲ್ಲಿ ನಿರ್ವಹಣೆ ಮಾಡುವ ಕಡತಗಳು ಸೇರಿದಂತೆ ಆರೋಗ್ಯ, ಸ್ವಚ್ಛತೆ, ಆಹಾರ ಪದಾರ್ಥಗಳ ಗುಣಮಟ್ಟ, ಅಡುಗೆ ಮನೆ, ಗೋದಾಮು ಹಾಗೂ ಗರ್ಭಿಣಿ ಮಹಿಳೆಯರಿಗೆ ಒದಗಿಸುತ್ತಿರುವ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ಅಲ್ಲದೆ ಮಕ್ಕಳೊಂದಿಗೆ ಮುಕ್ತ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನ್ಯಾಯಮೂರ್ತಿ ಪಾಟೀಲ್, ಅಂಗನವಾಡಿ ಕೇಂದ್ರಗಳಿಗೆ ಬಡ ಮಕ್ಕಳು ಬರುವುದರಿಂದ ಅವರಿಗೆ ಅಗತ್ಯವಿರುವ ಸೌಕರ್ಯಗಳನ್ನು ಪ್ರಾಮಾಣಿಕವಾಗಿ ಪೂರೈಸುವ ಮೂಲಕ ಅವರ ಭವಿಷ್ಯವನ್ನು ಉತ್ತಮ ಮಟ್ಟದಲ್ಲಿ ರೂಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಧಿಕಾರಿಗಳಿಗೆ ಸೂಚಿಸಿದರು.
ಆಯೋಗದ ಸಂಯೋಜಕ ವಿಶ್ವನಾಥ್ ಅಂಗಡಿ, ಸದಸ್ಯ ಜಗದೀಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಮೇಶ್ ಹಾಲಬಾವಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್.ಸಿದ್ದರಾಮಣ್ಣ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅನಂತ ಮೊದಲಾದವರು ಹಾಜರಿದ್ದರು.
ಆನಂತರ ಬೆಟ್ಟಹಲಸೂರು ಹಾಗೂ ಚಿಕ್ಕಜಾಲ ಗ್ರಾಮಗಳ ಅಂಗನವಾಡಿ ಕೇಂದ್ರಗಳಿಗೂ ಆಯೋಗದ ಸದಸ್ಯರು ಭೇಟಿ ನೀಡಿ ಪರಿಶೀಲಿಸಿದರು.