ಬೆಂಗಳೂರು: ನಗರದ ಕದಿರೇನಹಳ್ಳಿ `ಅಂಡರ್ ಪಾಸ್~ ಕಾಮಗಾರಿಯನ್ನು ಮುಂದಿನ ತಿಂಗಳೊಳಗಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಗುರುವಾರ ವಿಧಾನ ಪರಿಷತ್ತಿನಲ್ಲಿ ಭರವಸೆ ನೀಡಿದರು.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಪ್ರೊ.ಎಂ.ಆರ್. ದೊರೆಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, `ಅಂಡರ್ ಪಾಸ್~ನ ಕಾಮಗಾರಿ ಇದುವರೆಗೆ ನಿಧಾನಗತಿಯಲ್ಲಿ ಸಾಗಿದ್ದರಿಂದ ಸಾರ್ವಜನಿಕರು ಹಾಗೂ ವಾಹನ ಸಂಚಾರಕ್ಕೆ ಸ್ವಲ್ಪಮಟ್ಟಿಗೆ ಅನಾನುಕೂಲವಾಗಿದ್ದು ನಿಜ. ಕನಕಪುರ ರಸ್ತೆ ಭಾಗದಲ್ಲಿ ತಡೆಗೋಡೆ ನಿರ್ಮಾಣ ಕಾರ್ಯ ಎರಡು ವರ್ಷಗಳ ಹಿಂದೆ ಪೂರ್ಣಗೊಂಡಿದ್ದು, ಈ ಭಾಗದ ಸೇವಾ ರಸ್ತೆ ಹಾಗೂ ಡೆಕ್ ಮೇಲ್ಭಾಗದಲ್ಲಿಯೂ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ~ ಎಂದರು.
`ಅಂಡರ್ ಪಾಸ್~ ಕಾಮಗಾರಿ ಸ್ಥಳದಲ್ಲಿನ ಎಲ್ಲ ಅಡೆತಡೆಗಳನ್ನು ನಿವಾರಿಸಲಾಗಿದೆ. ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಲು ಕ್ರಮ ಕೈಗೊಳ್ಳಲಾಗುವುದು~ ಎಂದು ಸಿಎಂ ಭರವಸೆ ನೀಡಿದರು.
`ಕಾಮಗಾರಿ ವಿಳಂಬಕ್ಕಾಗಿ ಗುತ್ತಿಗೆದಾರರಿಗೆ 80 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಇದೀಗ ಶೇ 80ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಮುಂದಿನ ತಿಂಗಳೊಳಗಾಗಿ ಇನ್ನುಳಿದ ಶೇ 20ರಷ್ಟು ಕಾಮಗಾರಿ ಪೂರ್ಣಗೊಳಿಸಲಾಗುವುದು~ ಎಂದು ಅವರು ಹೇಳಿದರು.
ಹಲವು ವರ್ಷಗಳಿಂದ `ಅಂಡರ್ ಪಾಸ್~ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿರುವುದರಿಂದ ಸಾರ್ವಜನಿಕರು ಹಾಗೂ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ದೊರೆಸ್ವಾಮಿ ಸರ್ಕಾರದ ಗಮನ ಸೆಳೆದರು.