ಬೆಂಗಳೂರು: `ಆಸರೆ~ ಯೋಜನೆಯಡಿ ನಿರ್ಮಿಸುತ್ತಿರುವ 52,369 ಮನೆಗಳ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು ಅಕ್ಟೋಬರ್ ಅಂತ್ಯದ ವೇಳೆಗೆ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು. ಕಳಪೆ ಕಾಮಗಾರಿಯ ಬಗ್ಗೆ ಕೆಲವೊಂದು ದೂರುಗಳು ಬಂದಿದ್ದು, ಆ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಶುಕ್ರವಾರ ಇಲ್ಲಿ ತಿಳಿಸಿದರು.
ರಾಜ್ಯದ 285 ಗ್ರಾಮಗಳಲ್ಲಿ 58,655 ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿತ್ತು. ಆದರೆ ಇದುವರೆಗೆ 57,766 ಮನೆಗಳ ನಿರ್ಮಾಣ ಕಾರ್ಯ ಶುರುವಾಗಿದೆ. ಈ ಪೈಕಿ 52,369 ಮನೆಗಳು ಮುಕ್ತಾಯದ ಹಂತದಲ್ಲಿವೆ. ಆಗಸ್ಟ್ ಅಂತ್ಯಕ್ಕೆ 39,801 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಅವುಗಳನ್ನು ಹಸ್ತಾಂತರಿಸುವಂತೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಆರು ಸಾವಿರ ಮನೆ ನಿರ್ಮಿಸಲು ಇನ್ನೂ ಸಾಧ್ಯವಾಗಿಲ್ಲ. ಆ ಮನೆ ಪಡೆಯಬೇಕಿರುವ ಫಲಾನುಭವಿಗಳು ಬೇರೆ ಕಡೆಗೆ ಹೋಗಲು ಒಪ್ಪುತ್ತಿಲ್ಲ. ರಾಯಚೂರು ಸೇರಿದಂತೆ ಕೆಲವೆಡೆ ಈ ಸಮಸ್ಯೆ ಇದೆ. ಫಲಾನುಭವಿಗಳ ಮನವೊಲಿಸುವ ಮೂಲಕ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ನಿರ್ಮಿತಿ ಕೇಂದ್ರ, ಕರ್ನಾಟಕ ಗೃಹ ಮಂಡಳಿ, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ಸಂಸ್ಥೆ, ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ, ದಾನಿಗಳು ಸೇರಿದಂತೆ ಬೇರೆ ಬೇರೆ ಏಜೆನ್ಸಿಗಳು ಮನೆ ನಿರ್ಮಿಸಿರುವ ಕಾರಣ ಕೆಲವೆಡೆ ತೊಂದರೆ ಆಗಿವೆ. ಆದ್ದರಿಂದ 14 ಜ್ಲ್ಲಿಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಪತ್ರ ಬರೆದು ಕಳಪೆ ಕಾಮಗಾರಿ ನಡೆದಿದ್ದರೆ ಸಂಬಂಧಿಸಿದವರನ್ನು ಹೊಣೆಗಾರರನ್ನಾಗಿ ಮಾಡಲು ಸೂಚಿಸಲಾಗಿದೆ ಎಂದರು.