ಬೆಂಗಳೂರು: ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆಗೆ ಸಹಕಾರ ನೀಡಿದ ಆರೋಪದ ಮೇಲೆ ಇಬ್ಬರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳನ್ನು (ಎಸಿಎಫ್) ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಎಸಿಎಫ್ಗಳಾದ ಜೆ. ಶ್ರೀನಿವಾಸಮೂರ್ತಿ ಮತ್ತು ಕೆ.ಕೆ.ಪೂವಯ್ಯ ಅಮಾನತುಗೊಂಡ ಅಧಿಕಾರಿಗಳು.
ಇವರಲ್ಲದೆ, ಟಿ.ವಿ. ಶ್ರೀನಿವಾಸನ್ (ಬಳ್ಳಾರಿಯ ಅಂದಿನ ಪ್ರಭಾರ ಡಿಸಿಎಫ್) ಕೂಡ ಅಕ್ರಮದಲ್ಲಿ ಭಾಗಿಯಾಗಿದ್ದು, ಅವರು ಈಗ ಸೇವೆಯಲ್ಲಿ ಇಲ್ಲ.
ಬಳ್ಳಾರಿಯಲ್ಲಿನ ಅಕ್ರಮ ಗಣಿಗಾರಿಕೆ ಕುರಿತು ವರದಿ ನೀಡಲು ಸುಪ್ರೀಂಕೋರ್ಟ್ ನೇಮಿಸಿದ್ದ ಉನ್ನತಾಧಿಕಾರ ಸಮಿತಿ, ಈ ಅಧಿಕಾರಿಗಳು ಅಕ್ರಮಕ್ಕೆ ಸಹಕಾರ ನೀಡಿರುವುದರ ಬಗ್ಗೆ ಪ್ರಸ್ತಾಪಿಸಿತ್ತು. ಈ ಹಿನ್ನೆಲೆಯಲ್ಲಿ ಇವರನ್ನು ಅಮಾನತು ಮಾಡಲಾಗಿದೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.
ಗಣಿಗಾರಿಕೆಯ ಪರವಾನಗಿ ನೀಡುವಾಗ ಪಾಲಿಸಬೇಕಾದ ನಿಯಮಗಳನ್ನು ಪಾಲಿಸದೆ ಕೋಟ್ಯಂತರ ರೂಪಾಯಿ ನಷ್ಟ ಉಂಟು ಮಾಡಿರುವವರ ಪಟ್ಟಿಯಲ್ಲಿ ಈ ಅಧಿಕಾರಿಗಳು ಸೇರಿದ್ದು, ಇವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸಮಿತಿ ಶಿಫಾರಸು ಮಾಡಿತ್ತು.
ಬಳ್ಳಾರಿಯಲ್ಲಿ ಈ ಅಧಿಕಾರಿಗಳು ಕೆಲಸ ನಿರ್ವಹಿಸುವಾಗ ಅರಣ್ಯ ಕಾಯ್ದೆ ನಿಯಮಗಳನ್ನು ಉಲ್ಲಂಘಿಸಿದ್ದರು. ಅರಣ್ಯ ಪ್ರದೇಶದಲ್ಲಿ ವ್ಯಾಪಕ ಅಕ್ರಮ ಗಣಿಗಾರಿಕೆಗೆ ಅನುವು ಮಾಡಿಕೊಟ್ಟಿದ್ದರು. ಇದಲ್ಲದೆ, ಉಪ ಲೋಕಾಯುಕ್ತರ ವರದಿಯಲ್ಲೂ ಈ ಅಧಿಕಾರಿಗಳ ಬಗ್ಗೆ ಪ್ರಸ್ತಾಪಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.