ಬೆಂಗಳೂರು: ಬಾಗಲಕೋಟೆ ಮತ್ತು ವಿಜಾಪುರ ಜಿಲ್ಲೆಗಳ ನದಿಗಳಲ್ಲಿ ಯಾಂತ್ರೀಕೃತ ದೋಣಿಗಳನ್ನು ಬಳಸಿ ಅಕ್ರಮ ಮರಳು ಗಣಿಗಾರಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ತಕ್ಷಣ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆದೇಶಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದರು.
ವಿಧಾನ ಪರಿಷತ್ನಲ್ಲಿ ವಿರೋಧ ಪಕ್ಷದ ಉಪ ನಾಯಕ ಎಸ್.ಆರ್.ಪಾಟೀಲ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿ, ಕೃಷ್ಣಾ, ಘಟಪ್ರಭಾ ಮತ್ತು ಭೀಮಾ ನದಿಗಳಲ್ಲಿ ಅಕ್ರಮ ಮರಳು ದಂದೆ ನಡೆಯುತ್ತಿದ್ದು, ನಿಯಂತ್ರಿಸಬೇಕು ಎಂದು ಒತ್ತಾಯಿಸಿದರು.
ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ದೂರಿದರು. ಪ್ರಭಾವಿ ರಾಜಕಾರಣಿಗಳು ಈ ದಂದೆಯ ಹಿಂದೆ ಇದ್ದಾರೆ. ಸರ್ಕಾರ ಕ್ರಮ ಕೈಗೊಳ್ಳದೇ ಇದ್ದರೆ ನದಿ ಪಾತ್ರಗಳು ಬರಿದಾಗುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು.
ಪಾಟೀಲ ಅವರಿಗೆ ಉತ್ತರ ನೀಡಿದ ಸದಾನಂದ ಗೌಡ ಅವರು, `ಮರಳು ಗಣಿಗಾರಿಕೆ ಮೇಲೆ ನಿಯಂತ್ರಣ ಹೇರಲು ಸರ್ಕಾರ ಈಗಾಗಲೇ ಒಂದು ಕಾನೂನು ಜಾರಿಗೆ ತಂದಿದೆ. ಆದರೆ, ಕೆಲವು ಕಡೆಗಳಲ್ಲಿ ಪ್ರಭಾವಿ ವ್ಯಕ್ತಿಗಳ ಕುಮ್ಮಕ್ಕಿನಿಂದ ಅಕ್ರಮ ಮರಳು ಸಾಗಣೆ ನಡೆಯುತ್ತಿದೆ.
ಬಾಗಲಕೋಟೆ ಮತ್ತು ವಿಜಾಪುರ ಜಿಲ್ಲೆಗಳಲ್ಲಿ ಅಕ್ರಮವಾಗಿ ಮರಳು ಸಾಗಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ, ಎಸ್ಪಿಯವರಿಗೆ ಆದೇಶಿಸುತ್ತೇನೆ~ ಎಂದು ಭರವಸೆ ನೀಡಿದರು.