ಸುವರ್ಣಸೌಧ (ಬೆಳಗಾವಿ): ರಾಜ್ಯದಲ್ಲಿನ ನಗರ ಪ್ರದೇಶಗಳ ಕಂದಾಯ ಭೂಮಿಯಲ್ಲಿ (೯೪ ಸಿಸಿ) ಅನುಮತಿ ಇಲ್ಲದೆ ನಿರ್ಮಿಸಿಕೊಂಡಿರುವ ಮನೆಗಳ ಸಕ್ರಮಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ಮಸೂದೆಗೆ ವಿಧಾನಸಭೆ ಸೋಮವಾರ ಒಪ್ಪಿಗೆ ನೀಡಿತು. ಬಿಜೆಪಿ ಸರ್ಕಾರದ ಅವಧಿಯಲ್ಲೇ ವಿಧಾನಮಂಡಲದ ಉಭಯ ಸದನಗಳಲ್ಲಿ ಈ ಮಸೂದೆಯನ್ನು ಅಂಗೀಕರಿಸಲಾ ಗಿತ್ತು. ಆದರೆ, ಇದಕ್ಕೆ ಒಪ್ಪಿಗೆ ನೀಡಲು ನಿರಾಕರಿಸಿದ್ದ ರಾಜ್ಯಪಾಲರು ಕೆಲವು ಸ್ಪಷ್ಟನೆ ಕೋರಿ ವಾಪಸ್ ಕಳುಹಿಸಿದ್ದರು.
ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ವಿಧಾನಸಭೆಯಲ್ಲಿ ಈ ಮಸೂದೆಯನ್ನು ಅಂಗೀಕರಿಸಲಾಯಿತು. ಮಸೂದೆ ಮಂಡಿಸಿದ ಕಂದಾಯ ಸಚಿವ ವಿ.ಶ್ರೀನಿವಾಸ ಪ್ರಸಾದ್, ‘೨೦೧೨ರ ಜನವರಿಗೂ ಮುಂಚೆ ಕಂದಾಯ ಭೂಮಿಯಲ್ಲಿ ಮನೆಗಳನ್ನು ನಿರ್ಮಿಸಿಕೊಂಡವರಿಗೆ ಮಾತ್ರ ಇದು ಅನ್ವಯವಾಗಲಿದೆ’ ಎಂದು ಸ್ಪಷ್ಟಪಡಿಸಿದರು. ಸರ್ಕಾರಿ ಭೂಮಿ ಒತ್ತುವರಿ ಸಂಬಂಧ ವಿ.ಬಾಲಸುಬ್ರಮಣಿಯನ್ ನೀಡಿರುವ ವರದಿ, ಎ.ಟಿ.ರಾಮಸ್ವಾಮಿ ಅಧ್ಯಕ್ಷತೆಯ ಜಂಟಿ ಸದನ ಸಮಿತಿ ವರದಿ ಹಾಗೂ ಸುಪ್ರೀಂಕೋರ್ಟ್ ಆದೇಶ ಗಮನದಲ್ಲಿಟ್ಟುಕೊಂಡು ಈ ಮಸೂದೆಯನ್ನು ರಾಜ್ಯಪಾಲರಿಗೆ ಕಳುಹಿಸಲಾಗುತ್ತಿದೆ ಎಂದರು.
ಕಂದಾಯ ಭೂಮಿಯ ೨೦/೩೦ ಅಡಿ ನಿವೇಶನದಲ್ಲಿ ನಿರ್ಮಿಸಿಕೊಂಡಿರುವ ಮನೆಗಳಿಗೆ ಮಾತ್ರ ಇದು ಅನ್ವಯವಾಗಲಿದೆ. ನಿಗದಿತ ದಂಡ ವಿಧಿಸಿ ಮನೆಗಳನ್ನು ಸಕ್ರಮಗೊಳಿಸಲಾಗುತ್ತದೆ. ಬಿಬಿಎಂಪಿ ವ್ಯಾಪ್ತಿಯಿಂದ ೧೮ ಕಿ.ಮೀ, ಬೆಳಗಾವಿ, ಗುಲ್ಬರ್ಗ, ಹುಬ್ಬಳ್ಳಿ,-ಧಾರವಾಡ, ಮಂಗಳೂರು, ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಿಂದ ೧೦ ಕಿ.ಮೀ, ನಗರಸಭೆಗಳಿಂದ ೧೦ ಕಿ.ಮೀ, ಪುರಸಭೆಗಳಿಂದ ೫ ಕಿ.ಮೀ, ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಿಂದ ೩ ಕಿ.ಮೀ. ವ್ಯಾಪ್ತಿಯ ಹೊರಗೆ ಅನುಮತಿ ಇಲ್ಲದೆ ನಿರ್ಮಿಸಿಕೊಂಡಿರುವ ಮನೆಗಳಿಗೆ ಮಾತ್ರ ಅಕ್ರಮ ಸಕ್ರಮ ಅನ್ವಯವಾಗಲಿದೆ.