ಮಡಿಕೇರಿ: ಶಾಲೆಗಳಲ್ಲಿ ದುಡಿಯುತ್ತಿರುವ ಅಕ್ಷರ ದಾಸೋಹ ನೌಕರರಿಗೆ ಕನಿಷ್ಠ ವೇತನ ನೀಡುವಂತೆ ಒತ್ತಾಯಿಸಿ ಅ.11 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಅಕ್ಷರ ದಾಸೋಹ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಮಹಾದೇವ ತಿಳಿಸಿದರು.
ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಬೇಡಿಕೆ ಈಡೇರದಿದ್ದಲ್ಲಿ ಅ.20 ರಂದು ವಿಧಾನಸೌಧ ಚಲೋ ಚಳುವಳಿ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಕೆಲ ಶಾಲೆಯ ಶಿಕ್ಷಕರು, ಗ್ರಾಮ ಪಂಚಾಯಿತಿ ಪದಾಧಿಕಾರಿಗಳು ನೀಡುತ್ತಿರುವ ಕಿರುಕುಳವನ್ನು ಅನುಭವಿಸಿ, ಕನಿಷ್ಠ ವೇತನವು ಇಲ್ಲದೇ ಕಳೆದ ಹಲವು ವರ್ಷಗಳಿಂದ ಈ ನೌಕರರು ದುಡಿಯುತ್ತಿದ್ದಾರೆ ಎಂದು ಅವರು ತಿಳಿಸಿದರು.