ಬೆಂಗಳೂರು: ಇತ್ತೀಚೆಗೆ ನಿಧನರಾದ ಪುಟ್ಟಪರ್ತಿಯ ಸತ್ಯ ಸಾಯಿಬಾಬಾ, ಕೇಂದ್ರದ ಮಾಜಿ ಸಚಿವ ಎಂ.ಎಸ್.ಗುರುಪಾದಸ್ವಾಮಿ, ಮಾಜಿ ಶಾಸಕರಾದ ಸಿ.ಎಂ.ರೇವಣಸಿದ್ದಯ್ಯ, ಡಾ.ಎಂ.ನಾಗಪ್ಪ, ವೇದಾಂತ ಹೆಮ್ಮಿಗೆ, ಫಕೀರಪ್ಪ ಕೊಪ್ಪದ ಮತ್ತು ಹಿಂದುಸ್ತಾನಿ ಗಾಯಕ ಪಂಡಿತ್ ಮಾಧವ ಗುಡಿ ಅವರ ನಿಧನಕ್ಕೆ ಸಂತಾಪ ಸೂಚಿಸಿ ವಿಧಾನಮಂಡಲದ ಉಭಯ ಸದನಗಳಲ್ಲಿ ಗುರುವಾರ ನಿರ್ಣಯ ಅಂಗೀಕರಿಸಲಾಯಿತು.
ವಿಧಾನಸಭೆಯಲ್ಲಿ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಉಪ ನಾಯಕ ಟಿ.ಬಿ.ಜಯಚಂದ್ರ, ಕಾಂಗ್ರೆಸ್ ಶಾಸಕರಾದ ಡಿ.ಕೆ.ಶಿವಕುಮಾರ್ ಮತ್ತು ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ ಮೃತರ ಗುಣಗಾನ ಮಾಡಿದರು. ಬಳಿಕ ಒಂದು ನಿಮಿಷ ಮೌನ ಆಚರಿಸುವ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಲಾಯಿತು.
ವಿಧಾನ ಪರಿಷತ್ನಲ್ಲಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ನಿರ್ಣಯ ಮಂಡಿಸಿದರು. ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್.ಆಚಾರ್ಯ ಮತ್ತು ವಿರೋಧಪಕ್ಷದ ನಾಯಕಿ ಮೋಟಮ್ಮ ನಿರ್ಣಯವನ್ನು ಬೆಂಬಲಿಸಿ ಮಾತನಾಡಿದರು. ಮೃತರ ವ್ಯಕ್ತಿತ್ವ ಮತ್ತು ಸಾಧನೆಗಳನ್ನು ಬಣ್ಣಿಸಿದರು. ಮೌನ ಆಚರಿಸಿದ ಬಳಿಕ ನಿರ್ಣಯ ಅಂಗೀಕರಿಸಲಾಯಿತು.
ಕಲಾಪ ಅಂತ್ಯ: ಪರಿಷತ್ನಲ್ಲಿ ಸಂತಾಪ ಸೂಚನೆಯ ಬಳಿಕವೂ ಕಲಾಪ ಮುಂದುವರಿಸಲು ಸಿದ್ಧತೆ ನಡೆಸಲಾಗಿತ್ತು. ಆದರೆ ಪಕ್ಷದ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸದನವನ್ನು ಮುಂದೂಡುವಂತೆ ಕಾಂಗ್ರೆಸ್ ಸದಸ್ಯರು ಮನವಿ ಮಾಡಿದ ಹಿನ್ನೆಲೆಯಲ್ಲಿ ಸಂತಾಪ ಸೂಚನೆಯ ಬಳಿಕ ಯಾವುದೇ ಕಲಾಪ ನಡೆಯಲಿಲ್ಲ.