ಕೊಪ್ಪ: ಅಡಿಕೆ ಹಳದಿ ಎಲೆರೋಗ ಸಂತ್ರಸ್ತರ ಸಂಕಷ್ಟ ಅಧ್ಯಯನ ಮಾಡಿ ರಾಷ್ಟ್ರೀಯ ತೋಟಗಾರಿಕಾ ಆಯುಕ್ತ ಗೋರಕ್ ಸಿಂಗ್ ಮಾಡಿರುವ ಶಿಫಾರಸುಗಳು ಏಪ್ರಿಲ್ ಅಂತ್ಯದೊಳಗೆ ಅನುಷ್ಠಾನಗೊಳ್ಳಲಿವೆ ಎಂದು ಕೇಂದ್ರ ಸಚಿವ ವೀರಪ್ಪ ಮೊಯಿಲಿ ಹೇಳಿದರು.
ಪಟ್ಟಣದ ಪುರಸಭಾ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕ ಹಾಗೂ ಕಿಸಾನ್ ಕಾಂಗ್ರೆಸ್ ಜಂಟಿಯಾಗಿ ಸೋಮವಾರ ಹಮ್ಮಿಕೊಂಡಿದ್ದ `ಅಡಿಕೆ ಬೆಳೆಗಾರರ ಬೃಹತ್ ಸಮಾವೇಶ~ ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆಯಡಿ ಅಡಿಕೆ ಬೆಳೆ ಪುನಃಶ್ಚೇತನಕ್ಕೆ ಕೇಂದ್ರ ಸರ್ಕಾರ ಹಣ ಒದಗಿಸಿದ್ದು, ಅನುಷ್ಠಾನ ಕುರಿತು ಹಾಗೂ ರೈತರ ಇತರೆ ಸಮಸ್ಯೆಗಳ ಪರಿಹಾರದ ಬಗ್ಗೆ ಬೆಂಗಳೂರಿನಲ್ಲಿ ಇದೇ 22ರಿಂದ ಉನ್ನತ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಭರವಸೆ ನೀಡಿದರು.
ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ಈವರೆಗೆ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ. ರಾಜ್ಯ ನಿರ್ದಿಷ್ಟ ಕೊಡುಗೆ ಕೋರಿದರೆ ಕೇಂದ್ರ ಅನುಮೋದಿಸಲಿದೆ ಎಂದರು.
ಸಮಾವೇಶದ ಅಧ್ಯಕ್ಷತೆ ವಹಿಸಿದ್ದ ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್, ಈಗಾಗಲೇ ಹಳದಿ ಎಲೆ ರೋಗದ ಸಮಸ್ಯೆ ಕುರಿತು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಲು ಕಾಂಗ್ರೆಸ್ ನಾಯಕರು ಶ್ರಮಿಸಿದ್ದು, ಅವರ ಪ್ರಯತ್ನಕ್ಕೆ ಫಲ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.