ಮಡಿಕೇರಿ: ಕೊಡಗು, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಳದಿ ಎಲೆ ರೋಗಕ್ಕೆ ಸಿಲುಕಿ ಅಡಿಕೆ ಬೆಳೆ ಸಂಪೂರ್ಣ ನೆಲೆಕಚ್ಚಿರುವ ಹಿನ್ನೆಲೆಯಲ್ಲಿ ಅಡಿಕೆ ಬೆಳೆಗಾರರಿಗೆ ಪರಿಹಾರ ದೊರಕಿಸಿಕೊಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಬೆಂಗಳೂರಿನಲ್ಲಿ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಬೆಳಿಗ್ಗೆ ಭೇಟಿ ಮಾಡಿದ ಪೆರಾಜೆಯ ಜೆಡಿಎಸ್ ಮುಖಂಡ ಕೆ.ಸಿ. ಹರೀಶ್ ಅವರಿಗೆ ಗೌಡರು ಈ ಭರವಸೆ ನೀಡಿದ್ದಾರೆ.
ಹರೀಶ್ ಅವರು ಈ ವಿಷಯವನ್ನು ದೂರವಾಣಿ ಮೂಲಕ `ಪ್ರಜಾವಾಣಿ~ಗೆ ತಿಳಿಸಿದ್ದು, ಶೀಘ್ರದಲ್ಲಿಯೇ ಗೌಡರು ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಅವರನ್ನು ಭೇಟಿ ಮಾಡಿ, ಕಾಫಿ ಬೆಳೆಗಾರರ ಮಾದರಿಯಲ್ಲಿ ಅಡಿಕೆ ಬೆಳೆಗಾರರಿಗೂ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸುವುದಾಗಿ ತಿಳಿಸಿದ್ದಾರೆ.
ಹಳದಿ ಎಲೆ ರೋಗಕ್ಕೆ ಸಿಲುಕಿರುವ ಅಡಿಕೆ ಬೆಳೆಯು ಸಂಪೂರ್ಣವಾಗಿ ಹಾನಿಯಾಗಿದ್ದು, ಸಂಕಷ್ಟದಲ್ಲಿರುವ ಬೆಳೆಗಾರರ ಸಾಲವನ್ನು ಮನ್ನಾ ಮಾಡಬೇಕು ಎಂದು ಕೇಂದ್ರಕ್ಕೆ ಒತ್ತಾಯಿಸುವುದಾಗಿ ಗೌಡರು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿಯ ತಾಲ್ಲೂಕಿನ ವಿಭಾಗದ ಸಂಪಾಜೆ, ಪೆರಾಜೆ, ಚೆಂಬು ಗ್ರಾಮಗಳು ಹಾಗೂ ದಕ್ಷಿಣ ಕನ್ನಡದ ಸುಳ್ಯ ತಾಲ್ಲೂಕಿನ ಗ್ರಾಮಗಳು ಹಾಗೂ ಚಿಕ್ಕಮಗಳೂರಿನ ಗ್ರಾಮಗಳಲ್ಲಿ ಈ ಸಮಸ್ಯೆ ಭೀಕರವಾಗಿದೆ.