ಚನ್ನರಾಯಪಟ್ಟಣ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ವೇತನ ಹೆಚ್ಚಳಕ್ಕೆ ಆಗ್ರಹಿಸಿ ನಡೆಸುತ್ತಿರುವ ಮುಷ್ಕರ ಶುಕ್ರವಾರ ಎಂಟನೇ ದಿನಕ್ಕೆ ಕಾಲಿಟ್ಟಿದೆ.
ಚನ್ನರಾಯಪಟ್ಟಣ, ಉದಯಪುರ, ಹಿರೀಸಾವೆಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಲೇಜುಗಳಲ್ಲಿ 35 ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ತಿಂಗಳಿಗೆ ರೂ.5 ಸಾವಿರ ವೇತನ ನೀಡಲಾಗುತ್ತಿದೆ. ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ರೂ. 18 ಸಾವಿರ ವೇತನ ನೀಡುವಂತೆ ಯುಜಿಸಿ ಮಾಡಿರುವ ಶಿಫಾರಸು ಜಾರಿಗೊಳಿಸಿಲ್ಲ. ವರ್ಷಪೂರ್ತಿ ದುಡಿಸಿಕೊಂಡು 10 ತಿಂಗಳು ಮಾತ್ರ ವೇತನ ಪಾವತಿಸಲಾಗುತ್ತಿದೆ, ಸೇವಾ ಭದ್ರತೆಯೂ ಇಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ಅತಿಥಿ ಉಪನ್ಯಾಸಕರಿಗೆ 10 ಸಾವಿರ ರೂ. ವೇತನ ನೀಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಶೈಕ್ಷಣಿಕ ಸಾಧನೆಯಲ್ಲಿ ತಿಳಿಸಿದೆ. ಆದರೆ ಇದು ಅನುಷ್ಠಾನಕ್ಕೆ ಬಂದಿಲ್ಲ. ಪ್ರತಿ ತಿಂಗಳು ವೇತನ ನೀಡಬೇಕು ಎಂದು ಆಗ್ರಹಿಸಿದರು. ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ಆರಂಭವಾಗಿದ್ದು ಬೇಡಿಕೆಗಳು ಈಡೇರುವರೆಗೆ ತರಗತಿ ಬಹಿಷ್ಕರಿಸಲಾಗುವುದು ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.