ನರಸಿಂಹರಾಜಪುರ: ಯುಜಿಸಿ ನಿಯಮದಂತೆ ವೇತನವನ್ನು ಕನಿಷ್ಠ ರೂ. 25,000ಕ್ಕೆ ಏರಿಸಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಒಕ್ಕೂಟದ ಸದಸ್ಯರು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಸೋಮವಾರ ತರಗತಿ ಬಹಿಷ್ಕರಿಸಿ ಪ್ರತಿಭಟಿಸಿದರು.
ಈ ಸಂದರ್ಭ ಮಾತನಾಡಿದ ಅತಿಥಿ ಉಪನ್ಯಾಸಕರ ಸಂಘದ ಕೊಪ್ಪ ಸಂಚಾಲಕ ಪ್ರಕಾಶ್, ಸರ್ಕಾರ ರೂ. 5 ಸಾವಿರ ವೇತನ ನೀಡುತ್ತಿದೆ. 2009ರಲ್ಲಿ 12 ತಿಂಗಳ ಸಂಬಳವೂ ಬಂದಿಲ್ಲ. ಈ ಬಗ್ಗೆ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಪ್ರಯೋಜವಾಗಿಲ್ಲ ಎಂದು ಅಸಮಾಧಾನ ಹೊರಹಾಕಿದರು.
ಪ್ರತಿಭಟನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾದರೆ ಸರ್ಕಾರವೇ ಹೊಣೆ. 2003ರಿಂದ 2011ರವರೆಗೂ ಕಾರ್ಯನಿರ್ವಹಿಸಿರುವ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು. ಸರ್ಕಾರದಿಂದ ಲಿಖಿತ ಆದೇಶ ಬರುವವರೆಗೂ ಪ್ರತಿಭಟನೆ ನಿಲ್ಲದು ಎಂದರು.
ನಂತರ ಮಿನಿ ವಿಧಾನಸೌಧದವರೆಗೂ ಮೆರವಣಿಗೆ ನಡೆಸಿ ತಹಸೀಲ್ದಾರ್ಗೆ ಮನವಿ ಸಲ್ಲಿಸಲಾಯಿತು. ಸಂಘದ ಸಂಚಾಲಕ ಸುದರ್ಶನ್, ಗೌತಮ್, ಮಂಜನಾಯಕ್, ಜಲೇಂದ್ರ ನೇತೃತ್ವ ವಹಿಸಿದ್ದರು. ಎನ್.ಆರ್.ಪುರ, ಕೊಪ್ಪ, ಶೃಂಗೇರಿ, ತೀರ್ಥಹಳ್ಳಿಯ ಅತಿಥಿ ಉಪನ್ಯಾಸಕರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.