ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ನಕರಾಳು ತಾಂಡಾದಲ್ಲಿ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರವೆಸಗಿ ಹತ್ಯೆ ನಡೆಸಿರುವ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪಟ್ಟಣದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಬುಧವಾರ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಬಿವಿಪಿ ರಾಜ್ಯ ಸಮಿತಿಯ ಸದಸ್ಯ ಎಚ್. ಶಿವಾನಂದ್ ಮಾತನಾಡಿ, ತಾಲ್ಲೂಕಿನ ಬಹುತೇಕ ಗ್ರಾಮೀಣ ಪ್ರದೇಶದಲ್ಲಿರುವ ಹೆಣ್ಣುಮಕ್ಕಳು ಎಸ್ಎಸ್ಎಲ್ಸಿ ಹಾಗೂ ನಂತರದ ಶಿಕ್ಷಣ ಪಡೆಯಲು ಪೂರಕವಾದ ವಾತಾವರಣ ಇಲ್ಲ. ಗ್ರಾಮೀಣ ಪ್ರದೇಶದಲ್ಲಿ ಸರಕಾರಿ ಮಹಿಳಾ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಸ್ಥಾಪನೆಯತ್ತ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದರು.
ನಂತರ ತಹಶೀಲ್ದಾರ್ ಏಜಾಜ್ ಬೇಗ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷೆ ಭುವನೇಶ್ವರಿ, ಸೌಮ್ಯ, ನವೀನ್, ಸಂತೋಷ್, ದುರ್ಗಾನಾಯ್ಕ, ಮಂಜುನಾಥ್, ಪ್ರಶಾಂತ್ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಪ್ರತಿಭಟನೆ
ಹೂವಿನಹಡಗಲಿ: ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ನಕರಾಳ್ ತಾಂಡದಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆಗೈದಿರುವ ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಎಐಡಿಎಸ್ಓ ಪ್ರತಿಭಟನೆ ನಡೆಸಿತು.
ಪ್ರತಿಭಟನಾ ರಾ್ಯಾಲಿಯಲ್ಲಿ ಕಾಲೇಜು ವಿದ್ಯಾರ್ಥಿನಿಯರು, ಎಐಡಿಎಸ್ಓ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು. ಶಾಸ್ತ್ರಿ ವೃತ್ತದಲ್ಲಿ ಬಹಿರಂಗ ಸಭೆ ನಡೆಸಿ, ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಎಐಡಿಎಸ್ಓ ಸಂಚಾಲಕ ರಹಮತ್ ಬೀರಬ್ಬಿ ಮಾತನಾಡಿ, ದೇಶದಲ್ಲಿ ಹೆಚ್ಚಾಗುತ್ತಿರುವ ಅಮಾನುಷ ಕೃತ್ಯಗಳಿಗೆ ಅಶ್ಲೀಲ ಸಿನಿಮಾ, ಸಾಹಿತ್ಯ ಮತ್ತು ಮೊಬೈಲ್, ಇಂಟರ್ನೆಟ್ ನಲ್ಲಿ ಅಶ್ಲೀಲ ಚಿತ್ರಗಳ ಹಾವಳಿ ಕಾರಣವಾಗಿದೆ. ಕೇಂದ್ರ, ರಾಜ್ಯ ಸರ್ಕಾರಗಳು ಇಂತಹವುಗಳಿಗೆ ಕಡಿವಾಣ ಹಾಕದೇ ನಿರ್ಲಕ್ಷ್ಯ ವಹಿಸಿವೆ ಎಂದು ಟೀಕಿಸಿದರು. ಶಿವಲೀಲಾ, ಸಣ್ಣತಂಗೆಮ್ಮ, ವೀಣಾ, ರಾಘವೇಂದ್ರ, ಬೀರಾನಾಯ್ಕ, ಮೂರ್ತಿನಾಯ್ಕ, ಮೈನುದ್ದೀನ್, ಮರಿಯಪ್ಪ ಮಾತನಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.