ಶ್ರೀರಂಗಪಟ್ಟಣ: ದೆಹಲಿಯಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಹಾಗೂ ಜನರ ಪ್ರತಿಭಟನೆ ಹತ್ತಿಕ್ಕಲು ದೆಹಲಿ ಸರ್ಕಾರ ದಮನಕಾರಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಸುಮಾರು ಅರ್ಧತಾಸು ಪ್ರತಿಭಟನೆ ನಡೆಸಿದ ನಂತರ ದೆಹಲಿ ಮಖ್ಯಮಂತ್ರಿ ವಿರುದ್ಧ ಘೋಷಣೆ ಕೂಗಿದರು.
ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಹಾಗೂ ಇತರ ದೌರ್ಜನ್ಯ ಪ್ರಕರಣಗಳಿಗೆ ಕಾನೂನು ಸಡಿಲ ಆಗಿರುವುದೇ ಕರಣ. ಅಂತಹ ಅಮಾನವೀಯ ಕೃತ್ಯ ನಡೆಸಿದವರಿಗೆ ಕಠಿಣ ಶಿಕ್ಷೆಯಾಗಬೇಕು. ಅಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ ಹೇಳಿದರು.
ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ನ್ಯಾಯವಲ್ಲದ ಮಾರ್ಗ ಅನುಸರಿಸುತ್ತಿದ್ದಾರೆ. ಆ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುತ್ತಿದ್ದಾರೆ. ಜನರಲ್ಲಿ ಭಯ ಉಂಟು ಮಾಡುವ ಈ ಕ್ರಮ ಸರಿಯಲ್ಲ. ಅದಕ್ಕಾಗಿ ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.
ಗೌರವಾಧ್ಯಕ್ಷ ಜಯರಾಮೇಗೌಡ, ಕೊಡಿಯಾಲ ಜವರೇಗೌಡ, ಬಿ.ಎಸ್.ರಮೇಶ್, ಬಿ.ಸಿ.ಕೃಷ್ಣೇಗೌಡ, ನಂಜುಂಡಪ್ಪ, ಪಾಂಡು, ಯುವ ಘಟಕದ ಅಧ್ಯಕ್ಷ ಕಡತನಾಳು ಬಾಬು ಭಾಗವಹಿಸಿದ್ದರು.