ನೆಲಮಂಗಲ: ಗ್ರಾಮಾಂತರ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಓಬನಾಯಕನಹಳ್ಳಿ ಸಮೀಪದ ಮಾವಿನತೋಟದಲ್ಲಿ ಇಬ್ಬರು ಅಪರಿಚಿತ ಯುವತಿಯರನ್ನು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಶನಿವಾರ ನಡೆದಿದೆ. ಯುವತಿಯರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಮುಖ್ಯ ರಸ್ತೆಯಿಂದ 500 ಮೀಟರ್ ದೂರದ ತೋಟದಲ್ಲಿ ಈ ಭೀಕರ ಘಟನೆ ನಡೆದಿದ್ದು, ಯುವತಿಯರನ್ನು ಅಪಹರಿಸಿ ತೋಟದಲ್ಲಿ ಕೊಲೆ ಮಾಡಲಾಗಿದೆ. ಭಾನುವಾರ ಬೆಳಿಗ್ಗೆ ಗ್ರಾಮಸ್ಥರು ಬಹಿರ್ದೆಸೆಗೆ ತೆರಳಿದ್ದಾಗ ಹೊಗೆಯಾಡುತ್ತಿದ್ದ ಶವಗಳು ಕಂಡು ಬಂದವು.
ಯುವತಿಯರು ಗಾರ್ಮೆಂಟ್ಸ್ ಉದ್ಯೋಗಿಗಳು ಎಂಬುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ಬೆರಳಚ್ಚುತಜ್ಞರು ಹಾಗೂ ಶ್ವಾನದಳದೊಂದಿಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ವರೆಗೂ ಆರೋಪಿಗಳ ಸುಳಿವು ಸಿಕ್ಕಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ.
ಡಿವೈಎಸ್ಪಿ ಮಲ್ಲೇಶ್, ಇನ್ಸ್ಪೆಕ್ಟರ್ ಪ್ರಕಾಶ್, ಪಿಎಸ್ಐ ನವೀನ್ ಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇರೆ ಸ್ಥಳದಲ್ಲಿ ಯುವತಿಯರ ಅತ್ಯಾಚಾರ ನಡೆಸಿ ಕೊಲೆ ಮಾಡಿ ಶವಗಳನ್ನು ರಾತ್ರಿ ಹೊತ್ತಿನಲ್ಲಿ ತೋಟದಲ್ಲಿ ಸುಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.