ಜಿಂದ್(ಹರಿಯಾಣ) (ಪಿಟಿಐ): ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ಇಲ್ಲಿಗೆ ಭೇಟಿ ನೀಡಿ ಈಚೆಗೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಲಿತ ಬಾಲಕಿಯ ಕುಟುಂಬದ ಸದಸ್ಯರನ್ನು ಕಂಡು ಸಂತೈಸಿದರು.
ಇಂತಹ ಪೈಶಾಚಿಕ ಕೃತ್ಯ ನಡೆಸಿದವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದೂ ಸೋನಿಯಾ ಹೇಳಿದರು.`ಈ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಹರಿಯಾಣ ಮಾತ್ರವಲ್ಲ, ದೇಶದ ಇತರ ಭಾಗಗಳಲ್ಲೂ ಇಂತಹ ಕೃತ್ಯವನ್ನು ಎಸಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕು~ ಎಂದು ಜಿಂದ್ ಜಿಲ್ಲೆಯ ನಾರ್ವಾನಾ ಪಟ್ಟಣದಲ್ಲಿರುವ ಸಚ್ಚಾ ಗ್ರಾಮಕ್ಕೆ ಭೇಟಿ ನೀಡಿದ ಬಳಿಕ ಸೋನಿಯಾ ಮಾಧ್ಯಮದವರಿಗೆ ತಿಳಿಸಿದರು.
ಬಾಲಕಿಯ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಸೋನಿಯಾ ಗಾಂಧಿ, ಸಾಧ್ಯವಾದಷ್ಟು ನೆರವು ನೀಡುವ ಮತ್ತು ಕುಟುಂಬಕ್ಕೆ ನ್ಯಾಯ ಒದಗಿಸುವ ಭರವಸೆ ನೀಡಿದರು.