ಮಂಡ್ಯ: ಜಿಲ್ಲೆಯಲ್ಲಿ ಅಧಿಕಾರಿಗಳ ಕಾರ್ಯ ವೈಖರಿಯಿಂದಾಗಿ ಕುಡಿಯುವ ನೀರು ಯೋಜನೆಗಳ ಅನುಷ್ಠಾನ ಮಂದಗತಿಯಲ್ಲಿ ಸಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಜಗದೀಶ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು.
ಶುಕ್ರವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಮಾಡಿದ ಅವರು, ಕೆಲವು ಯೋಜನೆಗಳಿಗೆ ಶೇ 80ರಷ್ಟು ಹಣ ವೆಚ್ಚವಾಗಿದೆ. ಆದರೆ, ಉದ್ದೇಶವೇ ಈಡೇರಿಲ್ಲ ಎಂದರು.
ಇಂಥ ಯೋಜನೆಗಳನ್ನು ಗುರುತಿಸಿ ಡಿಸೆಂಬರ್ ವೇಳೆಗೆ ಕಾರ್ಯರೂಪಕ್ಕೆ ಇಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಬಳಿಕ ಸುದ್ದಿಗಾರರಿಗೆ ತಿಳಿಸಿದರು.
ಇದಕ್ಕೂ ಮುನ್ನ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಕುಡಿಯುವ ನೀರು ಯೋಜನೆ ವಿಷಯದಲ್ಲಿ ವಿಳಂಬ ಧೋರಣೆ ಅನುಸರಿಸಬಾರದು. ಆದಷ್ಟು ಸ್ಥಳಕ್ಕೆಭೇಟಿ ನೀಡಿ ಸಮಸ್ಯೆ ಪರಿಹರಿಸಲು ಯತ್ನಿಸಬೇಕು ಎಂದರು.
ಶಾಸಕರಾದ ಸಿ.ಎಸ್.ಪುಟ್ಟರಾಜು, ಎ.ಬಿ.ರಮೇಶ್ಬಾಬು, ಕಲ್ಪನಾ ಸಿದ್ದರಾಜು, ಎಂ. ಶ್ರೀನಿವಾಸ್, ಕಲ್ಪನಾ ಸಿದ್ದರಾಜು, ಅಶ್ವತ್ಥನಾರಾಯಣ, ಪಿ.ಎಂ.ನರೇಂದ್ರ ಸ್ವಾಮಿ ಅವರು ಸಭೆಯಲ್ಲಿ ಭಾಗವಹಿಸಿದ್ದು, ಇಲಾಖೆಯ ಯೋಜನೆಗಳ ಕಾಮಗಾರಿಗಳ ಅನುಷ್ಠಾನ ಕುರಿತು ಗಮನಸೆಳೆದರು.
ಇಲಾಖೆಯ ಪ್ರಧಾನಕಾರ್ಯದರ್ಶಿ ಅಮಿತಾ ಪ್ರಸಾದ್, ಜಿಲ್ಲಾಧಿಕಾರಿ ಡಾ. ಪಿ.ಸಿ.ಜಾಫರ್, ಸಿಇಒ ಜಯರಾಂ, ಜಿಪಂ ಅಧ್ಯಕ್ಷ ಶಿವಣ್ಣ, ಉಪಾಧ್ಯಕ್ಷೆ ಜಯಲಕ್ಷ್ಮಮ್ಮ ಅವರಿದ್ದರು.