ಬೆಂಗಳೂರು: ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸಿದ್ದಯ್ಯ ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಉಸ್ತುವಾರಿ ಆಯುಕ್ತ.ರಾಗಿ ನೇಮಕ ಮಾಡಲಾಗಿದೆ. ಅವರನ್ನು ಪೂರ್ಣಾವಧಿ ಆಯುಕ್ತರನ್ನಾಗಿ ನೇಮಕ ಮಾಡಲು ಸರ್ಕಾರ ತೀರ್ಮಾನಿಸಿದ್ದು, ಅನುಮತಿಗಾಗಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.
ಆಯೋಗದ ಅನುಮತಿ ದೊರೆತ ಬಳಿಕ ಸಿದ್ದಯ್ಯ ಅವರು ಬಿಬಿಎಂಪಿ ಆಯುಕ್ತರಾಗಿ ಕಾರ್ಯನಿರ್ವಹಿಸಲಿದ್ದಾರೆ. ಕಡ್ಡಾಯ ರಜೆ ಮೇಲೆ ಕಳುಹಿಸಿರುವ ರಜನೀಶ್ ಗೋಯಲ್ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲು ತೀರ್ಮಾನಿಸಲಾಗಿದೆ. ಆಯೋಗದ ಒಪ್ಪಿಗೆ ಸಿಕ್ಕ ನಂತರ ಅಧಿಕೃತ ಆದೇಶ ಹೊರಬೀಳಲಿದೆ.
ಬಿಬಿಎಂಪಿಯಲ್ಲಿ ಹೊಸದಾಗಿ ಸೃಷ್ಟಿಸಿರುವ ವಿಶೇಷಾಧಿಕಾರಿ (ಚುನಾವಣೆಗಳು) ಹುದ್ದೆಗೆ ಐಎಎಸ್ ಅಧಿಕಾರಿ ಡಾ.ಆರ್.ವಿಶಾಲ್ ಅವರನ್ನು ನೇಮಿಸಲಾಗಿದೆ. ಆರ್.ಆರ್.ಜನ್ನು ಅವರನ್ನು ಕರ್ನಾಟಕ ರಾಜ್ಯ ಆರೋಗ್ಯ ಪದ್ಧತಿಗಳ ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆಯ ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. ಮೊಹಮದ್ ಸಲಾವುದ್ದೀನ್ ಅವರನ್ನು ಪಶುಸಂಗೋಪನಾ ಇಲಾಖೆ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.