ಮಳವಳ್ಳಿ: ಆಧಾರ್ ನೋಂದಣಿ ಕಾರ್ಯಕ್ರಮದ ಬಗ್ಗೆ ಸೋಮವಾರ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ಇಲಾಖೆ ನೌಕರರು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಒಂದಿನ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ತರಬೇತುದಾರ ಅಂಜನ್ಕುಮಾರ್ ಮಾತನಾಡಿ, ಈಗಾಗಲೇ ಪಟ್ಟಣದ ಅಂಚೆ ಕಚೇರಿಯಲ್ಲಿ ನೋಂದಣಿ ಕಾರ್ಯ ನಡೆಯುತ್ತಿದ್ದು ಮುಂದಿನ ವಾರದಲ್ಲಿ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಧಾರ್ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ತಾಲ್ಲೂಕಿನ ಪ್ರತಿಯೊಬ್ಬರೂ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ತಹಶೀಲ್ದಾರ್ ಬಿ.ವಾಣಿ, ಪುರಸಭೆ ಕಿರಿಯ ಎಂಜಿನಿಯರ್ ಪಾರ್ವತಿ, ಶಿರಸ್ತೇದಾರ್ ಶಿವಶಂಕರ್ ಹಾಜರಿದ್ದರು.
ಸಾಂಸ್ಕೃತಿಕ ಚಟುವಟಿಕೆಗೆ ಸಿದ್ಧತೆ
ಮಂಡ್ಯ: ಪಾಂಡವಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶಾಸಕ ಸಿ.ಎಸ್.ಪುಟ್ಟರಾಜು ಅವರ ಮಾರ್ಗದರ್ಶನದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಿದ್ದು, ಅದಕ್ಕಾಗಿ ಸಿದ್ಧತೆಗಳು ಆರಂಭವಾಗಿವೆ ಎಂದು ಪ್ರಾಚಾರ್ಯ ಪ್ರೊ. ಸಿದ್ಧರಾಮು ತಿಳಿಸಿದ್ದಾರೆ.
ಪಾಂಡವಪುರಕ್ಕೆ ಕಾಲೇಜು ತರಲು ಶಾಸಕರ ಶ್ರಮವೇ ಕಾರಣವಾಗಿದ್ದು, ಕಾಲೇಜಿನ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಅವರೇ ನೇತೃತ್ವದ್ಲ್ಲಲಿಯೇ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.