ಸೋಮವಾರಪೇಟೆ: ಈ ಬಾರಿಯ ಮಳೆಗಾಲದಲ್ಲಿ ಎದುರಾಗಬಹುದಾದ ಪ್ರಕೃತಿ ವಿಕೋಪಗಳನ್ನು ಸಮರ್ಥವಾಗಿ ನಿಭಾಯಿಸುವ ಸಲುವಾಗಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಗಳ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿತ್ತು.
ಕಾರ್ಯಾಗಾರದಲ್ಲಿ ಮೈಸೂರು ಆಡಳಿತ ತರಬೇತಿ ಸಂಸ್ಥೆಯ ಬೋಧಕ ಡಾ. ಜೆ.ಆರ್. ಪರಮೇಶ್ ಅವರು ಅಧಿಕಾರಿಗಳಿಗೆ ಮಾಹಿತಿ ನೀಡಿದರು. 2005ರಲ್ಲಿ ಪ್ರಕೃತಿ ವಿಕೋಪ ನಿರ್ವಹಣೆ ಬಗ್ಗೆ ಡಿಸಾಸ್ಟರ್ ಮ್ಯೋನೇಜ್ಮೆಂಟ್ ಕಾಯ್ದೆ ಜಾರಿಗೆ ಬಂದಿದ್ದು, ಎಲ್ಲ ಅಧಿಕಾರಿಗಳು ಇದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಬೇಕು ಎಂದರು.
ಪ್ರಕೃತಿ ವಿಕೋಪಗಳು ಸಂಭವಿಸಿದಾಗ ತಕ್ಷಣ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯವಾಗಿದ್ದು, ಒಂದು ವೇಳೆ ವಿಫಲವಾದರೆ ಸಂಬಂಧಿಸಿದ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತಗಳು ಹೊಣೆಯಾಗಬೇಕಾಗುತ್ತದೆ ಎಂದರು.
ಪ್ರಕೃತಿ ವಿಕೋಪಗಳು ಸಂಭವಿಸಿದಾಗ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಆಡಳಿತ ತರಬೇತಿ ಸಂಸ್ಥೆಯಿಂದ ಅಧಿಕಾರಿಗಳಿಗೆ ತರಬೇತಿ ಹಾಗೂ ಅಗತ್ಯ ಪರಿಕರಗಳನ್ನು ನೀಡಲಾಗುವುದು. ಸಂಸ್ಥೆಯೊಂದಿಗೆ ಅಧಿಕಾರಿಗಳು ನಿರಂತರ ಸಂಪರ್ಕ ಹೊಂದಿರಬೇಕು ಎಂದು ಸಲಹೆ ಮಾಡಿದರು.
ತಹಶೀಲ್ದಾರ್ ವಿಜಯಕುಮಾರ್, ತಾಲ್ಲೂಕು ಪಂಚಾತಿ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ನರಸಿಂಹಮೂರ್ತಿ ನಿರೂಪಿಸಿದರು.