ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಪ್ರಕಟಿಸಿದ ಹಲವು ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೆಳಹಂತದ ಅಧಿಕಾರಿಗಳಿಗೆ ಇನ್ನೂ ಆದೇಶ ತಲುಪಿಲ್ಲ ಎಂದು ವಿಧಾನಸಭೆ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿ, ಬಜೆಟ್ನಲ್ಲಿ ಘೋಷಿಸಿದ ಹಲವು ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಆದೇಶವೇ ಹೋಗಿಲ್ಲ ಎಂಬ ಮಾಹಿತಿ ತಮಗೆ ಲಭ್ಯವಾಗಿದೆ. ಕೃಷಿ ಇಲಾಖೆಗೆ ಸಂಬಂಧಿಸಿದ ‘ಸ್ವಬೀಜಾಭಿವೃದ್ಧಿ ಯೋಜನೆ’ ಕುರಿತು ವಿಚಾರಿಸಿದಾಗ ಇದು ಗಮನಕ್ಕೆ ಬಂತು ಎಂದರು.
‘ಹಲವು ಕಾರ್ಯಕ್ರಮಗಳ ವಿಷಯದಲ್ಲಿ ಇದೇ ರೀತಿ ಆಗಿದೆ. ಎಲ್ಲ ಜನರಿಗೂ ಶುದ್ಧ ಕುಡಿಯುವ ನೀರು ಒದಗಿಸುವ ಕಾರ್ಯಕ್ರಮದ ವಿಚಾರದಲ್ಲಿ ಹೀಗೆ ಆಗಿತ್ತು. ಅಧಿಕಾರಿಗಳನ್ನು ವಿಚಾರಿಸಿದಾಗ ಅವರಿಗೆ ಮಾಹಿತಿಯೇ ಇರಲಿಲ್ಲ. ಈ ಕುರಿತು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದ ನಾನು, ತಕ್ಷಣವೇ ಕೆಳಹಂತದ ಅಧಿಕಾರಿಗಳಿಗೆ ಆದೇಶ ನೀಡುವ ಮತ್ತು ಮಾಹಿತಿ ಒದಗಿಸುವ ವ್ಯವಸ್ಥೆ ಮಾಡುವಂತೆ ಕೋರಿದ್ದೆ’ ಎಂದರು.