ಬೆಂಗಳೂರು: ಖಾಸಗಿ ವ್ಯಕ್ತಿಗಳನ್ನು ಕಚೇರಿಯೊಳಗೆ ಇರಿಸಿಕೊಂಡು ಭ್ರಷ್ಟಾಚಾರ ನಡೆಸುತ್ತಿದ್ದ ಆರೋಪದ ಮೇಲೆ ಶುಕ್ರವಾರ ಬಂಧಿತರಾಗಿದ್ದ ಕೆ.ಆರ್.ಪುರ ಉಪ ನೋಂದಣಿ ಅಧಿಕಾರಿ ಶಾಂತಮೂರ್ತಿ, ಕೆಂಗೇರಿ ಉಪ ನೋಂದಣಿ ಅಧಿಕಾರಿ ಎನ್.ಎ.ರಮೇಶ್, 14 ಮಧ್ಯವರ್ತಿಗಳನ್ನು ಒಂದು ವಾರ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಶುಕ್ರವಾರ ಏಕಕಾಲಕ್ಕೆ ನಗರದ ಐದು ಉಪ ನೋಂದಣಿ ಕಚೇರಿಗಳ ಮೇಲೆ ದಾಳಿ ನಡೆಸಿದ್ದ ಬೆಂಗಳೂರು ಲೋಕಾಯುಕ್ತ ಪೊಲೀಸರು, ದಿಢೀರ್ ಶೋಧ ಕಾರ್ಯ ನಡೆಸಿದ್ದರು. ಕೆ.ಆರ್.ಪುರ ಮತ್ತು ಕೆಂಗೇರಿ ಕಚೇರಿಗಳಲ್ಲಿ ಅಕ್ರಮ ನಡೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳು ಸೇರಿದಂತೆ 16 ಜನರನ್ನು ಬಂಧಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪ್ರಾಥಮಿಕ ವಿಚಾರಣೆ ಪೂರ್ಣಗೊಳಿಸಿದ ಲೋಕಾಯುಕ್ತ ಪೊಲೀಸರು, ಶನಿವಾರ ರಾತ್ರಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರ ಎದುರು ಹಾಜರು ಪಡಿಸಿದರು. ಆರೋಪಿಗಳನ್ನು ಒಂದು ವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ ನ್ಯಾಯಾಧೀಶರು, ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದರು.