ತಲಘಟ್ಟಪುರ: ಸರ್ಕಾರ ರೂಪಿಸುವ ಯೋಜನೆಗಳನ್ನು ನಿಜವಾದ ಫಲಾನುಭವಿಗಳಿಗೆ ತಲುಪಿಸುವ ಮಹತ್ತರ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಇದನ್ನು ಅಧಿಕಾರಿಗಳು ಚಾಚೂ ತಪ್ಪದೇ ಮಾಡಿದರೆ ಬಡವರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಕಗ್ಗಲಿಪುರ ಗ್ರಾ.ಪಂ. ಉಪಾಧ್ಯಕ್ಷ ಪರ್ವೀಜ್ಅಹಮದ್ ಹೇಳಿದರು. ಬೆಂಗಳೂರು ದಕ್ಷಿಣ ತಾಲ್ಲೂಕು ತರಳು ಸಮೀಪದ ವಾಸುದೇವಪುರದಲ್ಲಿ ಬೆಂಗಳೂರು ನಗರ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಹಾಗೂ ತರಳು ಗ್ರಾ.ಪಂ.ವತಿಯಿಂದ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಮಾರಂಭದಲ್ಲಿ 20ಜನರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ, ಎಸ್.ಜೆ.ಎಸ್.ವೈ ಯೋಜನೆಯಡಿ ಸ್ತ್ರೀ ಶಕ್ತಿ ಸಂಘಗಳಿಗೆ ತಲಾ ರೂ 1.25ಲಕ್ಷದ ಚೆಕ್ಗಳ ವಿತರಣೆ ಹಾಗೂ ವಿವಿಧ ತರಬೇತಿ ಕಾರ್ಯಕ್ರಮಗಳಿಗೆ ಅವರು ಚಾಲನೆ ನೀಡಿದರು. ತಾ.ಪಂ. ಮಾಜಿ ಉಪಾಧ್ಯಕ್ಷ ಅಶ್ವತನಾಯಕ್, ವಿ.ಎಸ್.ಎಸ್.ಎನ್.ಮಾಜಿ ಅಧ್ಯಕ್ಷ ಪಿ.ನಾರಾಯಣಪ್ಪ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಷಣ್ಮುಖ, ಕಾಂಗ್ರೆಸ್ ಮುಖಂಡ ನಾರಾಯಸ್ವಾಮಿ ಮತ್ತಿತರರು ಭಾಗವಹಿಸಿದ್ದರು.