ಬೆಂಗಳೂರು: ಬಿಜೆಪಿ ರಾಜ್ಯ ಘಟಕಕ್ಕೆ ಹೊಸ ಅಧ್ಯಕ್ಷರನ್ನು ಆದಷ್ಟು ಬೇಗ ನೇಮಕ ಮಾಡುವಂತೆ ಪಕ್ಷದ ವರಿಷ್ಠರ ಮೇಲೆ ಒತ್ತಡ ಹೇರಲು ಶುಕ್ರವಾರ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ನಿರ್ಧರಿಸಲಾಗಿದೆ.
ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಂದರ್ಭದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಹಾಲಿ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರನ್ನೇ ಡಿಸೆಂಬರ್ವರೆಗೂ ಮುಂದುವರಿಸುವ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಈ ತೀರ್ಮಾನಕ್ಕೆ ರಾಜ್ಯದ ಮುಖಂಡರಿಂದ ವಿರೋಧ ವ್ಯಕ್ತವಾಗಿದೆ. ಕಾವೇರಿ ಕಾವು ಇಳಿದ ಕೂಡಲೇ ಹೊಸ ಅಧ್ಯಕ್ಷರನ್ನು ನೇಮಿಸಬೇಕು ಎಂದು ಮುಖಂಡರು ಒತ್ತಾಯಿಸಿದ್ದಾರೆ.
ಅಧ್ಯಕ್ಷರ ನೇಮಕದಲ್ಲಿನ ವಿಳಂಬದ ಲಾಭವನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪಡೆಯುತ್ತಿದ್ದಾರೆ. ತಮ್ಮ ಹೇಳಿಕೆಗಳ ಕಾರಣದಿಂದಲೇ ಅಧ್ಯಕ್ಷರ ಆಯ್ಕೆಯನ್ನು ಪಕ್ಷ ಮುಂದೂಡಿದೆ ಎಂಬ ಭಾವನೆ ಸಾರ್ವಜನಿರಲ್ಲಿ ಮೂಡುವಂತೆ ಅವರು ಮಾಡಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕಾದರೆ ತಕ್ಷಣ ಅಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಕೆಲವು ಮುಖಂಡರು ಸಲಹೆ ಮಾಡಿದರು ಎನ್ನಲಾಗಿದೆ.
ಪಕ್ಷ ತೊರೆಯುವುದಾಗಿ ಹೇಳಿರುವ ಯಡಿಯೂರಪ್ಪ ಈಗಾಗಲೇ ಹಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನೂ ಗುರುತಿಸಿದ್ದಾರೆ. ಪಕ್ಷ ಮತ್ತು ಪಕ್ಷದ ಮುಖಂಡರ ವಿರುದ್ಧ ಸತತವಾಗಿ ವಾಗ್ಬಾಣ ಬಿಡುತ್ತಿದ್ದಾರೆ ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.