ಬೆಂಗಳೂರು: ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಜಲಾನಯನ ಪ್ರದೇಶದಲ್ಲಿನ ವಸ್ತುಸ್ಥಿತಿ ಅಧ್ಯಯನಕ್ಕೆ ಬಂದಿದ್ದ ಕೇಂದ್ರದ ತಜ್ಞರ ತಂಡ ಐದು ದಿನಗಳ ಪ್ರವಾಸ ಮುಗಿಸಿ ಸೋಮವಾರ ಸಂಜೆ ದೆಹಲಿಗೆ ತೆರಳಿತು. ತಂಡ ಒಂದೆರಡು ದಿನದಲ್ಲಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವ ಸಾಧ್ಯತೆ ಇದೆ.
ಪ್ರಧಾನಿ ನೇತೃತ್ವದ ಕಾವೇರಿ ನದಿ ಪ್ರಾಧಿಕಾರ, ತಮಿಳುನಾಡಿಗೆ ಇದೇ 15ರ ವರೆಗೆ ನಿತ್ಯ 9,000 ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿತ್ತು. ಈ ಆದೇಶವನ್ನು ಮರು ಪರಿಶೀಲಿಸುವಂತೆ ರಾಜ್ಯ ಸರ್ಕಾರ ಕೋರಿತ್ತು. ಈ ಹಿನ್ನೆಲೆಯಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿನ ವಸ್ತುಸ್ಥಿತಿ ಅಧ್ಯಯನಕ್ಕೆ ತಜ್ಞರ ತಂಡವೊಂದನ್ನು ಕೇಂದ್ರ ಸರ್ಕಾರ ಕಳುಹಿಸಿತ್ತು. ಗುರುವಾರ ರಾಜ್ಯಕ್ಕೆ ಬಂದಿದ್ದ ಈ ತಂಡ ಐದು ದಿನಗಳ ಕಾಲ ಮಂಡ್ಯ, ಮೈಸೂರು, ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ ಪ್ರವಾಸ ಮಾಡಿ, ಮಾಹಿತಿ ಸಂಗ್ರಹಿಸಿದೆ.
ಸೋಮವಾರ ಮಧ್ಯಾಹ್ನದವರೆಗೆ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮೊಹಮದ್ ಎ.ಸಾದಿಕ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳಿಂದ ತಾಂತ್ರಿಕ ಮಾಹಿತಿ ಪಡೆಯಿತು. ನೀರು ಬಿಡುವುದಕ್ಕೆ ಇರುವ ಸಮಸ್ಯೆಗಳ ಕುರಿತು ಅಂಕಿ-ಸಂಖ್ಯೆ ಮೂಲಕ ಕೇಂದ್ರ ತಂಡಕ್ಕೆ ಸಾದಿಕ್ ಮನವರಿಕೆ ಮಾಡಿದರು.