ಬೆಂಗಳೂರು: `ಬ್ಲೂ ಫಿಲಂ~ ಪ್ರಕರಣದಲ್ಲಿ ಕಳಂಕಿತರಾಗಿರುವ ಮಾಜಿ ಸಚಿವರಾದ ಲಕ್ಷ್ಮಣ ಸವದಿ, ಸಿ.ಸಿ. ಪಾಟೀಲ ಮತ್ತು ಕೃಷ್ಣ ಪಾಲೆಮಾರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿ ಕೆಪಿಸಿಸಿ ಮಹಿಳಾ ಘಟಕ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ಆರಂಭಿಸಿತು.
ಈ ಪ್ರಕರಣ ಮಹಿಳಾ ಸಮುದಾಯಕ್ಕೇ ಅಪಮಾನ ಎಸಗಿದಂತಿದೆ. ಪ್ರಕರಣದ ನೈತಿಕ ಹೊಣೆ ಹೊತ್ತು ಸ್ಪೀಕರ್ ಕೆ.ಜಿ. ಬೋಪಯ್ಯ ಮತ್ತು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ಸಲ್ಲಿಸಬೇಕು ಎಂದು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಮಹಿಳಾ ಕಾಂಗ್ರೆಸ್ ಸದಸ್ಯರು ಆಗ್ರಹಿಸಿದರು.ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಆರಂಭವಾದ ಉಪವಾಸ ಸತ್ಯಾಗ್ರಹ ಸಂಜೆ 4 ಗಂಟೆಯವರೆಗೆ ನಡೆಯಿತು. ಶನಿವಾರವೂ ಇದೇ ರೀತಿಯಲ್ಲಿ ಸತ್ಯಾಗ್ರಹ ಮುಂದುವರೆಯಲಿದೆ.
ಮೂವರು ಕಳಂಕಿತರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ನಾಯ್ಡು `ಪ್ರಜಾವಾಣಿ~ಗೆ ತಿಳಿಸಿದರು.
ತನಿಖೆಗೆ ಸ್ಪೀಕರ್ ಬೋಪಯ್ಯ ಅವರು ಸದನದ ವಿಚಾರಣಾ ಸಮಿತಿ ನೇಮಕ ಮಾಡಿದ್ದಾರೆ.
ಆದರೆ ಈ ಸಮಿತಿಯಲ್ಲಿ ಮಹಿಳೆಯರಿಗೆ ಸ್ಥಾನವೇ ಇಲ್ಲ. ಇಂಥ ಸಮಿತಿಯ ಅಗತ್ಯವೇ ಇಲ್ಲ. ಮಹಿಳೆಯರನ್ನು ಕೆಟ್ಟ ದೃಷ್ಟಿಯಿಂದ ನೋಡುವ ಸಚಿವರಿಂದ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.