ಹೈದರಾಬಾದ್ (ಪಿಟಿಐ): ಪ್ರತ್ಯೇಕ ತೆಲಂಗಾಣ ರಾಜ್ಯ ಬೇಡಿಕೆ ಈಡೇರುವವರೆಗೆ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರೆಸುವುದಾಗಿ ತೆಲಂಗಾಣ ಜಂಟಿ ಕ್ರಿಯಾ ಸಮಿತಿ ಶನಿವಾರ ಸಂಜೆ ಸ್ಪಷ್ಟಪಡಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿದ್ಯುತ್ ಪರಿಸ್ಥಿತಿ ಹಾಗೂ ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತವಾಗದಂತೆ ನೋಡಿಕೊಳ್ಳಲು ಆಂಧ್ರ ಪ್ರದೇಶ ಸರ್ಕಾರ ಪರ್ಯಾಯ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಸಿಂಗರೇಣಿ ಕಲ್ಲಿದ್ದಲು ಗಣಿ ಕಾರ್ಮಿಕರೂ ಸಹ ಮುಷ್ಕರದಲ್ಲಿ ಪಾಲ್ಗೊಂಡಿದ್ದು, ಕಲ್ಲಿದ್ದಲು ಕೊರತೆ ಉಂಟಾಗಿದೆ. ಹಾಗಾಗಿ ರಾಜ್ಯದ ಅಣು ಸ್ಥಾವರಗಳು ಕಲ್ಲಿದ್ದಲು ಕೊರತೆಯಿಂದ ಸ್ಥಗಿತಗೊಳ್ಳುವ ಹಂತಕ್ಕೆ ಬಂದಿದ್ದು, ತಕ್ಷಣವೇ ಸಮೀಪದ ಅಣು ಸ್ಥಾವರಗಳಿಂದ ಕಲ್ಲಿದ್ದಲು ಪೂರೈಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.
ಮುಷ್ಕರದ ಪರಿಸ್ಥಿತಿಯನ್ನು ಅವಲೋಕಿಸಲು ರಾಜ್ಯದ ಮುಖ್ಯ ಕಾರ್ಯದರ್ಶಿ ಪಂಕಜ್ ದ್ವಿವೇದಿ ಅವರು ಉನ್ನತ ಮಟ್ಟದ ಸಭೆ ನಡೆಸಿದರು.
ಮುಷ್ಕರದಲ್ಲಿ ತೊಡಗಿರುವ ಸಾರಿಗೆ ಇಲಾಖೆಯ ನೌಕರರು ಹಾಗೂ ಸಿಂಗರೇಣಿ ಕಲ್ಲಿದ್ದಲು ಕಾರ್ಮಿಕರು ತಕ್ಷಣವೇ ಮುಷ್ಕರ ಕೈಬಿಟ್ಟು ಕರ್ತವ್ಯದ ಮೇಲೆ ಹಾಜರಾಗುವಂತೆ ಮನವೊಲಿಸುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಮುಷ್ಕರ ಮುಂದುವರೆದರೆ ಸರ್ಕಾರಕ್ಕೆ ಹಾಗೂ ಸಂಬಂಧಿಸಿದ ಇಲಾಖೆಗಳಿಗೆ ಭರಿಸಲಾರದಷ್ಟು ನಷ್ಟವಾಗುತ್ತದೆ ಎನ್ನುವುದನ್ನು ಸಂಬಂಧಿಸಿದ ಇಲಾಖೆಗಳ ನೌಕರರು ಮತ್ತು ಕಾರ್ಮಿಕರಿಗೆ ಮನವರಿಕೆ ಮಾಡಿಕೊಂಡು ವಂತೆಯೂ ತಾಕೀತು ಮಾಡಲಾಯಿತು.
ತೆಲಂಗಾಣ ಜಂಟಿ ಕ್ರಿಯಾ ಸಮಿತಿ ಮುಷ್ಕರವನ್ನು ಮುಂದುವರೆಸುವುದಾಗಿ ತಿಳಿಸಿದೆ. ಹಾಗಾಗಿ ಆಂಧ್ರ ಪ್ರದೇಶದಲ್ಲಿ ವಿದ್ಯುತ್ ಹಾಗೂ ಸಾರಿಗೆ ಸಮಸ್ಯೆ ಎದುರಾಗಿದ್ದು, ಸರ್ಕಾರ ಪರ್ಯಾಯ ಕ್ರಮಗಳತ್ತ ಗಮನ ಹರಿಸಿದೆ.
ಅಗತ್ಯ ಬಿದ್ದರೆ ಇನ್ನೊಮ್ಮೆ ಉಪವಾಸ ಅನಿರ್ದಿಷ್ಟ ಸತ್ಯಾಗ್ರಹ ನಡೆಸ ಲಾಗುವುದು ಎಂದು ತೆಲಂಗಾಣ ರಾಷ್ಟ್ರ ಸಮಿತಿ ಅಧ್ಯಕ್ಷ ಕೆ.ಚಂದ್ರಶೇಖರ ರಾವ್ ಅವರು ತಿಳಿಸಿದ್ದಾರೆ.