ಬೆಂಗಳೂರು: ಹಲಸೂರುಗೇಟ್ ಮಹಿಳಾ ಠಾಣೆ ಇನ್ಸ್ಪೆಕ್ಟರ್ ಅಂಜುಮಾಲಾ ಟಿ.ನಾಯಕ್ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತ ಐಎಎಸ್ ಅಧಿಕಾರಿ ಪಂಕಜ್ಕುಮಾರ್ ಪಾಂಡೆ ಪತ್ನಿ ಅನುಜಾ ಪಾಂಡೆ ಅವರಿಗೆ ನಗರದ ಎಂಟನೇ ಎಸಿಎಂಎಂ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.
ರೂ 10,000 ಮೊತ್ತದ ಬಾಂಡ್ ನೀಡುವಂತೆ, ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಮತ್ತು ವಿಚಾರಣೆಗೆ ಹಾಜರಾಗುವಂತೆ ಷರತ್ತು ವಿಧಿಸಿ ನ್ಯಾಯಾಧೀಶ ಕಿರಣ್ಕಿಣಿ ಆದೇಶಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜ.29ರಂದು ನಡೆದ ಸಿಸಿಎಲ್ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಲು ಬಂದಿದ್ದ ಅನುಜಾ ಅಂಜುಮಾಲಾ ಅವರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರು ಅವರನ್ನು ಜ.30ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ನ್ಯಾಯಾಧೀಶರು, ಆರೋಪಿಗೆ ಫೆ.6ರವರೆಗೆ ಮಧ್ಯಂತರ ಜಾಮೀನು ನೀಡಿ ವಿಚಾರಣೆ ಮುಂದೂಡಿದ್ದರು. ಮಧ್ಯಂತರ ಜಾಮೀನು ಅವಧಿ ಸೋಮವಾರಕ್ಕೆ ಕೊನೆಗೊಂಡ ಹಿನ್ನೆಲೆಯಲ್ಲಿ ಅನುಜಾ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗೆ ಜಾಮೀನು ನೀಡಿ ಆದೇಶ ಹೊರಡಿಸಿದರು.