ಮಂಡ್ಯ: ಸ್ಥಳೀಯ ಸಂಸ್ಥೆಗಳಲ್ಲಿ ಶೇ 22.75ರ ಅನುದಾನದ ಹಣವು ಪರಿಣಾಮಕಾರಿಯಾಗಿ ಬಳಕೆ ಆಗುತ್ತಿಲ್ಲ ಎಂಬ ಆಕ್ಷೇಪ ಮಂಗಳವಾರ ನಗರದಲ್ಲಿ ನಡೆದ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ವ್ಯಕ್ತವಾಯಿತು. ಜಿಲ್ಲಾಧಿಕಾರಿ ಡಾ.ಪಿ.ಸಿ.ಜಾಫರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಈ ಕುರಿತು ಆಕ್ಷೇಪವನ್ನು ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಆಯಾ ಸ್ಥಳೀಯ ಸಂಸ್ಥೆಗಳಲ್ಲಿ ಈ ನಿರ್ದಿಷ್ಟ ಅನುದಾನದ ಮೊತ್ತ ಸಮರ್ಪಕವಾಗಿ ಬಳಕೆ ಆಗಿ, ಫಲಾನುಭವಿಗಳಿಗೆ ತಲುಪುವಂತೆ ಪರಿಶೀಲಿಸುವ ಭರವಸೆ ನೀಡಿದರು. ಅಲ್ಲದೆ, ದುರ್ಬಳಕೆ ಯತ್ನ ಕಂಡುಬಂದರೆ ಕ್ರಮಕೈಗೊಳ್ಳುವುದಾಗಿ ಹೇಳಿದರು.
ಗುತ್ತಿಗೆ ನೀಡುವಾಗಿ ಪರಿಶಿಷ್ಟ ಜಾತಿ, ವರ್ಗದ ಗುತ್ತಿಗೆದಾರರಿಗೆ ಕನಿಷ್ಠ 5 ಲಕ್ಷ ರೂಪಾಯಿ ಮೌಲ್ಯದ ಗುತ್ತಿಗೆ ನೀಡಬೇಕು. ಹಾಸ್ಟೆಲ್ ಸಮಸ್ಯೆ, ಜಾತಿ ಪ್ರಮಾಣ ಪತ್ರ ಪಡೆಯುವ ತೊಡಕು ಸಮಸ್ಯೆಗಳೂ ಸಭೆಯಲ್ಲಿ ಪ್ರಸ್ತಾಪವಾದವು.
ಸಭೆಯಲ್ಲಿ ಜಿ.ಪಂ. ಸಿಇಒ ಜಯರಾಂ, ಪೊಲೀಸ್ ವರಿಷ್ಠಾಧಿಕಾರಿ ಕೌಶಲೇಂದ್ರ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಪುಟ್ಟಮಾದಯ್ಯ ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.