ಸಾಗರ: ಕನ್ನಡ ಸಾಹಿತ್ಯ ಪರಿಷತ್ತಿನ ಶತಮಾನೋತ್ಸವ ಆಚರಣೆಗೆ ರಾಜ್ಯ ಸರ್ಕಾರ ವಿಶೇಷ ಅನುದಾನ ಬಿಡುಗಡೆ ಮಾಡದೆ ಇದ್ದರೆ ಪರಿಷತ್ತಿನ ಆವರಣದಲ್ಲಿ ಆಮರಣಾಂತ ಉಪವಾಸ ಮಾಡುತ್ತೇನೆ ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಹೇಳಿದರು. ಮಡಿಕೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿರುವ ಡಾ.ನಾ.ಡಿಸೋಜ ಅವರಿಗೆ ಸಮ್ಮೇಳನದ ಅಧ್ಯಕ್ಷತೆ ವಹಿಸುವಂತೆ ಪರಿಷತ್ತಿನ ವತಿಯಿಂದ ಅಧಿಕೃತ ಆಹ್ವಾನ ನೀಡಲು ಸೋಮವಾರ ಇಲ್ಲಿಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಪರಿಷತ್ತಿನ ಕಟ್ಟಡ ನಿರ್ಮಾಣಕ್ಕೆ ₨ 5ಕೋಟಿ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಶತಮಾನೋತ್ಸವ ಆಚರಣೆಗೆ ₨ 2ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಕೋರಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಈ ಸಂಬಂಧ ಎರಡು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದರೂ ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವಂತೆ ಕಾಣುತ್ತಿಲ್ಲ ಎಂದು ದೂರಿದರು.
ಕಾರ್ಯಕ್ರಮಗಳಿಗೆ ಬರುವುದಾಗಿ ಒಪ್ಪಿಕೊಂಡು ನಂತರ ಕೈಕೊಡುವ ಪ್ರವೃತ್ತಿ ಮಂತ್ರಿಗಳಲ್ಲಿ ಹೆಚ್ಚಾಗಿದೆ. ಹಾಗಾಗಿ, ಸರ್ಕಾರದ ವಿರುದ್ಧ ನಾನು ಗರಂ ಆಗಿ ಮಾತನಾಡಿದ್ದು ನಿಜ. ಪರಿಷತ್ತಿಗೆ ಸರ್ಕಾರದ ನೆರವು ಇಲ್ಲದೆ ಇದ್ದರೆ ಸಮ್ಮೇಳನ ಸೇರಿದಂತೆ ವಿವಿಧ ಚಟುವಟಿಕೆ ನಡೆಸುವುದು ಕಷ್ಟಸಾಧ್ಯ. ಈ ಕಾರಣಕ್ಕೆ 100 ವರ್ಷಗಳ ಆಚರಣೆ ನಂತರ ಪರಿಷತ್ತಿನ ಕಚೇರಿಗೆ ಬೀಗ ಹಾಕಿ ಸರ್ಕಾರದ ಕೈಗೆ ಕೊಡುತ್ತೇನೆ ಎಂದು ಹೇಳಿದ್ದು, ಸರ್ಕಾರದ ಕಣ್ಣು ತೆರೆಸುವ ಉದ್ದೇಶದಿಂದ ಈ ರೀತಿ ಪ್ರತಿಕ್ರಿಯಿಸಿದ್ದೇನೆ ಎಂದು ಹೇಳಿದರು.